ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಹ ಬಂದಿದೆ. 466 ಗ್ರಾಮಗಳಲ್ಲಿ ತೊಂದರೆ ಉಂಟಾಗಿದೆ. 13 ಜನರು ಪ್ರವಾಹಕ್ಕೆ ಬಲಿಯಾಗಿದ್ದಾರೆ. ಸಂಪರ್ಕ ರಸ್ತೆ, ಸೇತುವೆ ದುರಸ್ತಿಗೆ ಸಭೆ ಮಾಡಿದ್ದೇನೆ. ಅಧಿಕಾರಿಗಳ ಜತೆ ಸಭೆ ಮಾಡಿದ್ದೇನೆ. ಪರಿಹಾರ ಕೆಲಸಕ್ಕೆ ರಾಜ್ಯ ಸರ್ಕಾರದಿಂದ510 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಮಳೆಯಿಂದಾಗಿ 13 ಮಂದಿ ಸಾವನ್ನಪ್ಪಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. 466 ಗ್ರಾಮಗಳಲ್ಲಿ ಸಮಸ್ಯೆ ಉಂಟಾಗಿದೆ. ನೆರೆ ಪರಿಹಾರಕ್ಕಾಗಿ ಸರ್ಕಾರ ಶೀಘ್ರವೇ 500 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ಎನ್ಡಿಆರ್ಎಫ್ ಅನುದಾನದಲ್ಲಿ 150 ಕೋಟಿ ಬಳಕೆ ಮಾಡಿಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಮಳೆಯಿಂದಾಗಿ ರಸ್ತೆ, ಸೇತುವೆಗಳು ಹಾಳಾಗಿದ್ದು ರಿಪೇರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಬಳಿ 700 ಕೋಟಿ ಇದ್ದು ಬಳಕೆ ಮಾಡಿಕೊಳ್ಳಬೇಕು, ಮನೆ ಹಾಗೂ ಬೆಳೆ ಸಮೀಕ್ಷೆ 15ದಿನದೊಳಗೆ ಆಗಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಮನೆ ಕಳೆದುಕೊಂಡವರಿಗೆ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ರಾಜ್ಯದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರೂಪಾಯಿ ಹಾಗೂ ಭಾಗಶಃ ಹಾನಿಯಾಗಿದ್ದರೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಅಲ್ಪ ಹಾನಿಗೆ 50 ಸಾವಿರ ರೂಪಾಯಿ ನೀಡಲಾಗುತ್ತಿದೆ. ಈಗಲೂ ಅದೇ ರೀತಿ ಪರಿಹಾರ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಬೆಳೆ ಹಾನಿ ಸಮೀಕ್ಷೆಗೆ ತಂಡವನ್ನು ಕಳಿಸಲು ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.