ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂಸ್
ಬೆಂಗಳೂರು : ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ ಶಿವಪ್ಪ ನಾಯಕ ಕೃಷಿ ವಿವಿ ಎಂದು ನಾಮಕರಣ ಮಾಡಲಾಗಿದೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ ಎಂದು ಇಂದು (ಜುಲೈ 24) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.
ಈ ನೂತನ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಈ ವೇಳೆ, ಸಾಗರ ತಾಲೂಕಿನ ಇರುವಕ್ಕಿ ಗ್ರಾಮದಲ್ಲಿರುವ ಕೃಷಿ ವಿವಿಗೆ ಹೆಸರು ಘೋಷಣೆ ಮಾಡಿದ್ದಾರೆ. 2 ವರ್ಷ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ಸಮಗ್ರ ಅಭಿವೃದ್ಧಿ ಮಾಡಲಾಗಿದೆ. ಅಭಿವೃದ್ಧಿಗೆ ಗರಿಷ್ಠ ಪ್ರಯತ್ನ ಮಾಡಿದ ತೃಪ್ತಿ ನನಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಏಪ್ರಿಲ್ ವೇಳೆಗೆ ಶಿವಮೊಗ್ಗ ಏರ್ಪೋರ್ಟ್ ಕಾರ್ಯಾರಂಭ ಆಗಲಿದೆ ಎಂದೂ ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಒಟ್ಟು ಸುಮಾರು 1,074 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆಯನ್ನು ಅವರು ಇಂದು ನೆರವೇರಿಸಿದ್ದಾರೆ. 560ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.
ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ನೀರುಣಿಸುವ ನೀರಾವರಿ ಯೋಜನೆಗಳನ್ನು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಯುದ್ದೋಪಾಧಿಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ ಎಂದು ಬಿಎಸ್ವೈ ಹೇಳಿದ್ದಾರೆ.
ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಮಲೆನಾಡು, ಅರೆ ಮಲೆನಾಡು, ಬಯಲುಸೀಮೆ ಮತ್ತು ಕರಾವಳಿ ಪ್ರದೇಶಗಳಿಗೆ ವಿಶೇಷವಾದ ಹಾಗೂ ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಶಾಸ್ತ್ರ ಹೊಂದಿದ ಸಮಗ್ರ ವಿಶ್ವವಿದ್ಯಾಲಯವನ್ನು 2013 ರಲ್ಲಿ ಪ್ರಾರಂಭಿಸಿದರು. ಈ ವಿಶ್ವವಿದ್ಯಾಲಯವು ಸಿಎಂ ಬಿ.ಎಸ್.ಯಡಿಯೂರಪ್ಪನವರ ಕನಸಿನ ಕೂಸಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ . ಯಡಿಯೂರಪ್ಪನವರು ಈ ವಿಶ್ವವಿದ್ಯಾಲಯವನ್ನು 2013 ರಲ್ಲಿ ಹುಟ್ಟು ಹಾಕಿ ತಾವೇ ತಮ್ಮ ಅಮೃತ ಹಸ್ತದಿಂದ ಇಂದು ಸದರೀ ನೂತನ ವಿಶ್ವವಿದ್ಯಾಲಯದ ಆವರಣವನ್ನು ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಉದ್ಘಾಟನೆ ಮಾಡುತ್ತಿರುವುದು ರಾಜ್ಯದ ಅದರಲ್ಲಿಯೂ ವಿಶೇಷವಾಗಿ ಮಲೆನಾಡಿನ ರೈತರಿಗೆ ಒಂದು ವರದಾನವಾಗಿದೆಂದು ಬಿಸಿಪಿ ಅಭಿಪ್ರಾಯಪಟ್ಟರು.
ಈ ವಿಶ್ವವಿದ್ಯಾಲಯಕ್ಕೆ 787 ಎಕರೆ ಜಮೀನನ್ನು ನೀಡಿ 155 ಕೋಟಿ ರೂ.ಗಳನ್ನು ಮಂಜೂರು ಮಾಡಿ ಇರುವ ನೂತನ ಆವರಣ ಅಭಿವೃದ್ಧಿಗೆ ಸರ್ಕಾರವು ಆದೇಶ ಹೊರಡಿಸಿತ್ತು. ಇದರ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಉಡುಪಿ, ಕೊಡಗು ಮತ್ತು ಮಂಗಳೂರು ಸೇರಿ ಒಟ್ಟು 7 ಜಿಲ್ಲೆಗಳು ಸೇರುತ್ತವೆ.
ಸರ್ಕಾರದ ಆದೇಶದಂತೆ ಇರುವ ಆವರಣದಲ್ಲಿ 4 ಲಕ್ಷ 95 ಸಾವಿರ ಚದುರ ಅಡಿ ಪ್ರದೇಶದಲ್ಲಿ ಆಡಳಿತ ಭವನ, ಬೆಳೆ ಉತ್ಪಾದನೆ ಮತ್ತು ಬೆಳೆ ಸಂರಕ್ಷಣಾ ವಿಭಾಗ, ಬೆಳೆ ಅಭಿವೃದ್ಧಿ ಮತ್ತು ಜೈವಿಕ ತಂತ್ರಜ್ಞಾನ ವಿಭಾಗ, ಸಮಾಜ ಮತ್ತು ಮೂಲ ವಿಜ್ಞಾನಗಳ ವಿಭಾಗ, ತೋಟಗಾರಿಕೆ ಮತ್ತು ಅರಣ್ಯ ವಿಭಾಗ, ಗ್ರಂಥಾಲಯ, ಕೊಳಚೆ ನೀರು ಶುದ್ದೀಕರಣ ಘಟಕ ಹಾಗೂ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ನಿಲಯಗಳನ್ನು ನೂತನವಾಗಿ ನಿರ್ಮಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಇಂದು ಗೃಹ ಕಚೇರಿ 'ಕೃಷ್ಣಾ'ದಲ್ಲಿ ವರ್ಚುವಲ್ ಹೋಸ್ಟಿಂಗ್ ಮೂಲಕ ನೆರವೇರಿಸಲಾಯಿತು.
— B.S. Yediyurappa (@BSYBJP) July 24, 2021
ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಗಣ್ಯರು ಉಪಸ್ಥಿತರಿದ್ದರು. pic.twitter.com/0S9B8KkZNe