ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂಸ್
ಬೆಂಗಳೂರು : ರಾಜಭವನದ ಆವರಣದಲ್ಲಿ ಇಂದು ನಡೆದ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಹೊರಗೆ ಬಂದು ಸುದ್ದಿಗಾರರ ಜೊತೆ ಮಾತನಾಡಿ, ನಾನು ಇಂದು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಅನೇಕ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸವಾಲುಗಳು ಸಾಕಷ್ಟಿವೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದಲ್ಲಿರುವ ಎಲ್ಲಾ ನಾಯಕರನ್ನು ಒಗ್ಗೂಡಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಡೆಸುತ್ತೇನೆ, ಜನಪರ ಆಡಳಿತ ನೀಡುವುದು ನಮ್ಮ ಗುರಿಯಾಗಿದೆ ಎಂದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ, ಮುರುಗೇಶ್ ನಿರಾಣಿ ಅವರನ್ನೊಳಗೊಂಡು, ಪಕ್ಷದ ಎಲ್ಲಾ ಪ್ರಮುಖ ನಾಯಕರುಗಳು ಹಾಗೂ ಬೊಮ್ಮಾಯಿ ಕುಟುಂಬಸ್ಥರು ಭಾಗಿಯಾಗಿದ್ದರು.
ಪ್ರಧಾನ ಮಂತ್ರಿಗಳ ಮೇಲೆ ದೇಶದ ಜನತೆ ಅಪಾರವಾದ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಇಂದು ಸಂಜೆ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ, ಅವರ ಮತ್ತು ಕೇಂದ್ರ ವರಿಷ್ಠರ ಸಲಹೆಗಳನ್ನು ಪಡೆದು ಮುಂದಿನ ಕೆಲಸಕ್ಕೆ ಕಾಲಿಡುತ್ತೇನೆ ಎಂದರು.