ಆಕ್ಸಿಜನ್ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂಸ್
ಬೆಂಗಳೂರು : ಇನ್ನೂ ಎಷ್ಟು ಜನ ಸಾಯಬೇಕು? ನಿಮಗೆ ಜನ ಸಾಯುವುದು ಬೇಕೆ? ನಿಮ್ಮ ವಿವರಣೆ ಬೇಕಿಲ್ಲ. ಕೂಡಲೇ ರಾಜ್ಯದ ಆಕ್ಸಿಜನ್ ಪಾಲು ಹೆಚ್ಚಳ ಮಾಡಿ. ಇಲ್ಲವಾದರೆ ಆದೇಶಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ರಾಜ್ಯದ ಆಕ್ಸಿಜನ್ ಬಳಕೆಗೆ ವಿಧಿಸಿರುವ ಮಿತಿ ಮತ್ತು ಪೂರೈಕೆಯ ಪ್ರಮಾಣ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡು ತಿಳಿಸದಿದ್ದರೆ ನ್ಯಾಯಾಲಯವೇ ಈ ಸಂಬಂಧ ಸೂಕ್ತ ಆದೇಶ ಹೊರಡಿಸಲಿದೆ ಎಂದು ಎಚ್ಚರಿಸಿದೆ.
ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್. ಓಕ್ ಹಾಗೂ ಹಿರಿಯ ನ್ಯಾ. ಅರವಿಂದ್ ಕುಮಾರ್ ಅವರಿದ್ದ ಪೀಠವು ಕೇಂದ್ರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಸೋಂಕು ಕಡಿಮೆ ಇರುವ ರಾಜ್ಯಗಳಿಗೆ ಹೆಚ್ಚು ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ, ಕರ್ನಾಟಕದಲ್ಲಿ ಎಷ್ಟೊಂದು ಪಾಸಿಟಿವ್ ಕೇಸ್ಗಳಿದ್ದರೂ ಏಕೆ ತಾರತಮ್ಯ ಎಂದು ತರಾಟೆಗೆ ಕೋರ್ಟ್ ತೆಗೆದುಕೊಂಡಿತು.
ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಜನ ಸಾಯುತ್ತಿದ್ದರೂ ಇನ್ನೂ ಯಾವಾಗ ಆಕ್ಸಿಜನ್ ಪ್ರಮಾಣ ಹೆಚ್ಚಿಸುತ್ತೀರಿ? ಇನ್ನೆಷ್ಟುಜನ ಸಾಯಬೇಕು? ನೀವು ನಿರ್ಧಾರ ತೆಗೆದುಕೊಳ್ಳುವವರೆಗೆ ಕಾಯುತ್ತಾ ಕೂರಬೇಕೇ? ಎಂದು ಕಟುವಾಗಿ ಪ್ರಶ್ನಿಸಿದ ನ್ಯಾಯಪೀಠ, ದೇಶದ ಇತರೆ ರಾಜ್ಯಗಳಲ್ಲಿ ದಾಖಲಾಗಿರುವ ಕೋವಿಡ್ ಪ್ರಕರಣಗಳು ಹಾಗೂ ರಾಜ್ಯವಾರು ಆಕ್ಸಿಜನ್ ಪೂರೈಕೆ ವಿವರ ಒದಗಿಸುವಂತೆ ತಾಕೀತು ಮಾಡಿದೆ.
ಬುಧವಾರ ಬೆಳಗ್ಗೆ 10ರೊಳಗೆ ಕೇಂದ್ರ ಸರಕಾರ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಹೆಚ್ಚಿಸಬೇಕು. ಇಲ್ಲದಿದ್ದರೆ ನ್ಯಾಯಾಲಯವೇ ಈ ಸಂಬಂಧ ಆದೇಶ ಹೊರಡಿಸಲಿದೆ. ಕೇಂದ್ರ ಸೂಕ್ತ ಕ್ರಮ ಕೈಗೊಳ್ಳಬೇಕು, ಎಂದು ನ್ಯಾಯಪೀಠ ತಾಕೀತು ಮಾಡಿ ವಿಚಾರಣೆಯನ್ನು ಮುಂದೂಡಿತು.