ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ: ಡಿ.ಕೆ. ಶಿವಕುಮಾರ್ | ಜನತಾ ನ್ಯೂಸ್
ಬೆಂಗಳೂರು : ಕೊರೊನಾ ವಿಚಾರವಾಗಿ ಸರ್ವಪಕ್ಷ ಸಭೆ ಬಗ್ಗೆ ರಾಜ್ಯಪಾಲರ ಕಚೇರಿಯಿಂದ ಆಹ್ವಾನ ಬಂದಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಕೊರೊನಾ ಪರಿಸ್ಥಿತಿ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರ ಇಂದು ಸಭೆ ನಡೆಸಿದ್ದು, ರಾಜ್ಯಪಾಲರು ನಾಳೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಗೆ ರಾಜ್ಯಪಾಲರ ಕಚೇರಿಯಿಂದ ಆಹ್ವಾನ ಬಂದಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ಮೊದಲ ಬಾರಿಗೆ ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿದ್ದು, ಮುಂದಿನ ದಿನಗಳಲ್ಲಿ ರಾಜ್ಯಪಾಲರ ಆಳ್ವಿಕೆ ಅಧಿಕೃತವಾಗಿ ಜಾರಿಯಾಗುವ ಲಕ್ಷಣ ಗೋಚರಿಸುತ್ತಿದೆ. ನಾಳೆ ನಾವು ಸಭೆಯಲ್ಲಿ ಭಾಗವಹಿಸುತ್ತೇವೆ. ಎಂದಿದ್ದಾರೆ.
ಕೊರೋನಾ ಲಸಿಕೆ ಪೂರೈಕೆ ಗುತ್ತಿಗೆಯನ್ನು ಕೇವಲ ಎರಡು ಕಂಪನಿಗಳಿಗೆ ಯಾಕೆ ನೀಡಲಾಗಿದೆ? ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು. ಎಲ್ಲ ಅಭಿವೃದ್ಧಿ ಕೆಲಸ ನಿಲ್ಲಿಸಿ. ಈ ವಿಚಾರದ ಬಗ್ಗೆ ಗಮನ ಹರಿಸಿ. ಎಲ್ಲರಿಗೂ ಆರೋಗ್ಯ ಸೇವೆ ಸಿಗುವಂತೆ ಮಾಡಬೇಕು. ಆದರೆ ಈವರೆಗೂ ಯಾವುದೇ ಸಿದ್ಧತೆ ಆಗಿಲ್ಲ. ಈ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ನಾವು ಕಾಂಗ್ರೆಸ್ ಕಚೇರಿಯಲ್ಲಿ ವೈದ್ಯರ ಘಟಕದ ಜತೆ ಚರ್ಚೆ ಮಾಡಿ ಒಂದು ಹೆಲ್ಪ್ ಲೈನ್ ಆರಂಭಿಸಲು ತೀರ್ಮಾನಿಸಿದ್ದೇವೆ. ಅಲ್ಲಿ ಸೋಂಕಿತರಿಗೆ ಮಾರ್ಗದರ್ಶನ ನೀಡಿ ನೆರವಾಗುತ್ತೇವೆ ಎಂದಿದ್ದಾರೆ.