ಕೆ.ಸಿ ಜನರಲ್ ಆಸ್ಪತ್ರೆಯ ಕೋವಿಡ್ ವಾರ್ಡ್ ಗೆ ತೆರಳಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ | ಜನತಾ ನ್ಯೂಸ್
ಬೆಂಗಳೂರು : ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಭಾನುವಾರ ಬೆಳಗ್ಗೆ ಕೆ.ಸಿ.ಜನರಲ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಘಟಕಗಳಿಗೆ ಭೇಟಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದರು.
ಪಿಪಿಎ ಕಿಟ್ ಧರಿಸಿ ಸೋಂಕಿತರನ್ನು ಭೇಟಿ ಮಾಡಿ ಮಾತನಾಡಿದರು. ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಮಾಡ್ಯೂಲರ್ ಕೋವಿಡ್ ಐಸಿಯು ಘಟಕಗಳಿಗೂ ಅವರು ತೆರಳಿ ಅಲ್ಲಿನ ವ್ಯವಸ್ಥೆಯನ್ನು ಕೂಲಂಕಶವಾಗಿ ಪರಿಶೀಲನೆ ಮಾಡಿದರು.
ಕೆಸಿ ಜನರಲ್ ಆಸ್ಪತ್ರೆಯಲ್ಲಿ ಹೆಚ್ಚು ತಜ್ಞ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಅತ್ಯುತ್ತಮ ಸೌಲಭ್ಯಗಳು ಕೂಡ ಇವೆ. ಹೀಗಾಗಿ ಇಲ್ಲಿಯೇ ಇನ್ನೊಂದು ದೊಡ್ಡ ಪ್ರಮಾಣದ ಹೊರ ರೋಗಿಗಳ ವಿಭಾಗ (ಒಪಿಡಿ)ವನ್ನು ತೆರೆಯಲು ಸರಕಾರ ನಿರ್ಧರಿಸಿದೆ ಎಂದು ಡಿಸಿಎಂ ಹೇಳಿದರು.
ಈ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಖಾ ಎಂಬ ನರ್ಸ್ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ಮನ್ ಕೀ ಬಾತ್ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಅತ್ಯಂತ ಸಂತೋಷದ ಸಂಗತಿ. ಅವರಿಗೆ ಸರಕಾರದ ಮೆಚ್ಚುಗೆ ಇದೆ. ಹಾಗೆಯೇ ಆಸ್ಪತ್ರೆಯ ಎಲ್ಲ ವೈದ್ಯರು, ನರ್ಸ್ಗಳು ಹಾಗೂ ಪ್ಯಾರಾ ಮಡಿಕಲ್ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆಗಳ ಕೊರತೆ ಇದೆ. ಅದನ್ನು ಇಲ್ಲ ಎಂದು ಹೇಳುತ್ತಿಲ್ಲ. ಈ ಆಸ್ಪತ್ರೆಯಲ್ಲಿ 450 ಬೆಡ್ ಇದೆ. ಸಾಕಾಗುತ್ತಿಲ್ಲ ನಿಜ, ಆದರೆ ದಿನಕ್ಕೆ ಕೊನೆಪಕ್ಷ 2,000 ಜನರಿಗೆ ಚಿಕಿತ್ಸೆ ಸಿಗುವ ವ್ಯವಸ್ಥೆ ಆಗಬೇಕು. ಅದಕ್ಕೆ ಅಗತ್ಯವಾದ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಒಪಿಡಿಗೆ ಬಂದು ಚಿಕಿತ್ಸೆ ಪಡೆದು ಮನೆಯಲ್ಲೇ ಹೋಮ್ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯಬಹುದು. ಉತ್ತಮ ಔಷಧಿಯನ್ನು ನೀಡಲಾಗುತ್ತಿದೆ. ರೋಗ ಲಕ್ಷಣಗಳಿದ್ದವರೆಲ್ಲ ಬಂದು ಆಸ್ಪತ್ರೆಗೆ ದಾಖಲಾಗಬೇಕು ಎಂದಲ್ಲ, ಮನೆಯಲ್ಲೇ ಇದ್ದು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದರು.