ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ ಮುಂದೆಯೇ ನಿರ್ಮಾಣವಾಯ್ತು ಕೊರೊನಾ ಸೆಂಟರ್! | ಜನತಾ ನ್ಯೂಸ್
ಹಾವೇರಿ : ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿರುವ ತಮ್ಮ ಮನೆಯ ಆವರಣವನ್ನು ಈಗ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿರುವ ತಮ್ಮ ಮನೆಯ ಮುಂದಿನ ಜಾಗದಲ್ಲೇ 50 ಹಾಸಿಗೆಗಳ ಕೊರೊನಾ ಸೆಂಟರ್ ನಿರ್ಮಿಸಿದ್ದಾರೆ. ನಿನ್ನೆ ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿದಾಗ ಈ ವಿಷಯವನ್ನ ಬಹಿರಂಗಪಡಿಸಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುವ ಕೋವಿಡ್ ಸೋಂಕಿತರ ಪ್ರಾಣ ಕಾಪಾಡುವ 25 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಹಸ್ತಾಂತರಿಸಿದರು.
ಗುರುವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಸ್ಥಿತಿಗತಿ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಮಾಡಲಾದ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಆಕ್ಸಿಜನ್ ಕನ್ಸೆಂಟ್ರೇಟರ್ ಗಳನ್ನು ಶಿಗ್ಗಾವಿ ತಾಲೂಕು ವೈದ್ಯಾಧಿಕಾರಿಗಳಿಗೆ ಸಾಂಕೇತಿಕವಾಗಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಸವಣೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಸವಣೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 20 ಹಾಸಿಗೆಗಳನ್ನು ಸಿದ್ಧಪಡಿಸಿ. ಮುಂದಿನ ನಾಲ್ಕು ದಿನಗಳಲ್ಲಿ 25 ಆಕ್ಸಿಜನ್ ಕನ್ಸೆಂಟ್ರೇಟರ್ ಗಳನ್ನು ಸವಣೂರು ಆಸ್ಪತ್ರೆಗೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.
ಸಚಿವರ ಈ ಜನಸೇವೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.