ಸಿಎಂ ಬಿಎಸ್ವೈ ವಿರುದ್ಧ ಭ್ರಷ್ಟಾಚಾರ ಆರೋಪ ತನಿಖೆಗೆ ಕೋರಿದ್ದ ಅರ್ಜಿ ವಜಾ | ಜನತಾ ನ್ಯೂಸ್
ಬೆಂಗಳೂರು : ವಸತಿ ಯೋಜನೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ಅವರ ಬಳಿ 12.5 ಕೋಟಿ ಲಂಚ ಪಡೆದಿರುವ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಅವರ ಪುತ್ರ ಬಿ.ವೈ.ವಿಜಯೇಂದ್ರ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರ ವಿರುದ್ಧ ವಿಚಾರಣೆಗೆ ಅನುಮತಿ ಕೋರಿ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ಸಲ್ಲಿಸಿರುವ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ವಜಾಗೊಳಿಸಿದೆ.
ಸರಕಾರಿ ಹುದ್ದೆಯಲ್ಲಿರುವ ಸಿಎಂ ಬಿಎಸ್ವೈ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂಬ ಹಿನ್ನೆಲೆಯಲ್ಲಿ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
2021ರ ಜೂ.6ರಂದು ಟಿ.ಜೆ.ಅಬ್ರಹಾಂ ಭ್ರಷ್ಟಾಚಾರ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ಆಪ್ತರಾದ ಶಶಿಧರ ಮರಡಿ, ವಿರೂಪಾಕ್ಷಪ್ಪ ಯಮಕನಮರಡಿ, ಸಂಜಯಶ್ರೀ, ಚಂದ್ರಕಾಂತ್ ರಾಮಲಿಂಗಂ, ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ.ಪ್ರಕಾಶ್, ಕ್ರೆಸೆಂಟ್ ಹೋಟೆಲ್ ಮಾಲಕ ಕೆ.ರವಿ ವಿರುದ್ಧ ತನಿಖೆ ಮಾಡುವಂತೆ ಕೋರಿ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ವೇಳೆ ತಾವೇ ಖುದ್ದು ವಾದ ಮಂಡಿಸಿದ್ದ ಅಬ್ರಹಾಂ, ಭ್ರಷ್ಟಾಚಾರ ಆರೋಪಕ್ಕೆ ಪೂರಕವಾಗಿ ಕೆಲ ಬ್ಯಾಂಕ್ ದಾಖಲೆಗಳು ಹಾಗೂ ವಾಟ್ಸ್ ಆಯಪ್ ಮೆಸೇಜ್ಗಳನ್ನು ಒಳಗೊಂಡ ದಾಖಲೆಗಳನ್ನು ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಪೀಠ, ಗುರುವಾರ ಆದೇಶ ಪ್ರಕಟಿಸಿತು. ಆರೋಪಿತರ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ದೂರು ಸಲ್ಲಿಸಿದ್ದರಿಂದ ಎಸಿಬಿ ಅರ್ಜಿದಾರರ ಮನವಿ ತಿರಸ್ಕರಿಸಿದೆ. ಹೀಗಾಗಿ ಅರ್ಜಿದಾರರು ಮಾಡಿರುವ ಮನವಿಯಂತೆ ತನಿಖೆಗೆ ನಿರ್ದೇಶಿಸಲಾಗದು ಎಂದು ತಿಳಿಸಿ ಅರ್ಜಿ ವಜಾಗೊಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಸೆಪ್ಟೆಂಬರ್ನಲ್ಲಿ ಟಿ.ಜೆ.ಅಬ್ರಾಹಂ ಅವರು ಇದೇ ದೂರನ್ನು ಎಸಿಬಿಗೆ ಸಲ್ಲಿಸಿದ್ದರು. ಸೆ.25ರಂದು ಎಸಿಬಿ ದೂರನ್ನು ತಿರಸ್ಕರಿಸಿತ್ತು. ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಖಾಸಗಿ ದೂರು ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.