SSLC ಪರೀಕ್ಷೆಗೆ ಸಿದ್ಧತೆ ಪೂರ್ಣ: ಸಚಿವ ಸುರೇಶ್ ಕುಮಾರ್ | ಜನತಾ ನ್ಯೂಸ್
ಬೆಂಗಳೂರು : ಜುಲೈ 19 ಮತ್ತು 22ರಂದು ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಸಿದ್ಧತೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾರ್ಗದರ್ಶನ ನೀಡಿದ ಸಚಿವರು, ಯಾವುದೇ ಒಂದು ಮಗುವಿಗೂ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಸಲಹೆ ನೀಡಿದರು.
ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಸಿದ್ಧತೆ ಕುರಿತು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಗಳು ನಡೆದಿವೆ. ಡಿಸಿಗಳ ನೇತೃತ್ವದಲ್ಲಿ ಸಿಇಒ, ಎಸ್.ಪಿ ಡಿಎಚ್ಒ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆಗಳು ನಡೆದಿದ್ದು, ಪರೀಕ್ಷಾ ಸಿದ್ಧತೆ ಮತ್ತು ಎಸ್ಒಪಿ ಪಾಲನೆ ಕುರಿತಂತೆ ನಿರ್ದೇಶನ ನೀಡಿದ್ದು, ಆಯಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಿದ್ದಾರೆಂದು ಸಚಿವರು ಹೇಳಿದರು.
ಪರೀಕ್ಷೆಗೂ ಎರಡು ದಿನಗಳ ಮೊದಲು ಪರೀಕ್ಷಾ ಪ್ರಕ್ರಿಯೆಗೆ ನೇಮಕವಾಗಿರುವ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ಪ್ರಕ್ರಿಯೆ ನಡೆಸಲಿದ್ದಾರೆ.
ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್ ಪೂರೈಕೆ ಸೇರಿದಂತೆ ಎಲ್ಲ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು, ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಅಧೀಕ್ಷಕರು ಸೇರಿದಂತೆ ಅಗತ್ಯವಿರುವ ಎಲ್ಲ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದ್ದು, ಅವರೆಲ್ಲರಿಗೂ ತಂತಮ್ಮ ಕರ್ತವ್ಯದ ಪಟ್ಟಿಯನ್ನು ನೀಡಲಾಗಿದೆ.
ಪೂರ್ಣ ಶುಲ್ಕ ಪಾವತಿಸದೇ ಇರುವುದರಿಂದ ಹಾಲ್ ಟಿಕೆಟ್ ನೀಡಿಲ್ಲ ಎಂಬ ವಿಚಾರದ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ಹಾಲ್ ಟಿಕೆಟ್ ನೀಡದ ಶಾಲೆಗಳ ವಿಚಾರವಾಗಿ ಬಿಇಒಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಮಕ್ಕಳಿಗೆ ಪರೀಕ್ಷಾಂಗಣ ಸುರಕ್ಷತೆ ಮತ್ತು ಆತ್ಮವಿಶ್ವಾಸದ ಭಾವಗಳನ್ನು ಮೂಡಿಸುವಂತೆ ಕ್ರಮ ವಹಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಈಗಾಗಲೇ ಒಎಂಆರ್ ಶೀಟ್ ಕುರಿತು ಹತ್ತಾರು ಬಾರಿ ತಿಳಿವಳಿಕೆ ಮೂಡಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲೂ ಪ್ರತಿ ವಿದ್ಯಾರ್ಥಿಗೂ ಕೊಠಡಿ ಮೇಲ್ವಿಚಾರಕರು ಈ ಕುರಿತು ಸೂಕ್ತ ಮಾರ್ಗದರ್ಶನ ನೀಡಲು ಸೂಚನೆ ನೀಡಲಾಗಿದೆ. ಯಾವುದೇ ರೀತಿಯಲ್ಲೂ ಗೊಂದಲವಾಗದಂತೆ ಗಮನ ಹರಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಯಾವುದೇ ಶಾಲೆಯೂ ಶುಲ್ಕ ವಿಷಯಕ್ಕೆ ಸಂಬಂಧಿಸಿ, ಪರೀಕ್ಷೆಗೆ ಮಕ್ಕಳಿಗೆ ಪ್ರವೇಶ ಪತ್ರ ನಿರಾಕರಿಸಬಾರದು. ಅದಕ್ಕಾಗಿ ಪರೀಕ್ಷಾ ಮಂಡಳಿ ಇಂದು ಅಗತ್ಯ ಸುತ್ತೋಲೆ ಹೊರಡಿಸಲಿದೆ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.