ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ : ಸಚಿವ ಬಿ.ಶ್ರೀರಾಮುಲು | ಜನತಾ ನ್ಯೂಸ್
ಬೆಂಗಳೂರು : "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಖಾತೆ ಹಂಚಿಕೆ ವಿಚಾರದಲ್ಲಿ ನನಗೆ ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ' ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, "ನಮ್ಮ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆಯಲ್ಲಿ ಕೆಲಸ ಮಾಡುತ್ತಿರುವುದೇ ಸಂತೋಷ, ಸಮಾಧಾನ ವಿಚಾರವಾಗಿದೆ. ಯಾವುದೇ ವಿಚಾರ ಬಂದಾಗ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ,' ಎಂದು ತಿಳಿಸಿದರು.
ತಾವು ಉಪಮುಖ್ಯಮಂತ್ರಿಯಾಗಬೇಕು ಎಂಬುದು ಜನರ ನಿರೀಕ್ಷೆಯಾಗಿತ್ತು. ಆದರೆ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಹೇಳಿದರು. ಕಳೆದ 30 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಜನರ ಮಧ್ಯೆ ಬೆಳೆದು ಬಂದವನು. ಜನರ ಆಶೀರ್ವಾದ ಇರುವವರೆಗೂ ಇರುತ್ತೇನೆ. ಈಗಾಗಲೇ ಸಚಿವ, ಶಾಸಕ ಹಾಗೂ ಸಂಸದರಾಗಿ ಸೇವೆ ಸಲ್ಲಿಸಿದ ಅನುಭವ ಇದೆ. ರಾಜಕೀಯಕ್ಕೆ ಬಂದಿದ್ದೇ ಒಂದು ಸವಾಲು. ಹೀಗಾಗಿ ತಮಗೆ ನೀಡಿರುವ ಖಾತೆಯ ಜವಾಬ್ದಾರಿ ನಿರ್ವಹಿಸುವುದಾಗಿ ತಿಳಿಸಿದರು.
ನಮ್ಮ ಭಾರತಿಯ ಜನತಾ ಪಾರ್ಟಿಯಲ್ಲಿ ಹೊಸ ಮುಖ್ಯಮಂತ್ರಿ ಆಗಬೇಕು, ತದನಂತರ ಸಂಪುಟದಲ್ಲಿ ಮಂತ್ರಿ ಬದಲಾವಣೆ ಮಾಡಿ, ಯಾರಿಗೆ ಯಾವ ಜವಾಬ್ದಾರಿ ಕೊಡಬೇಕು ಎನ್ನುವ ತೀರ್ಮಾನ ತೆಗೆದುಕೊಂಡಾಗ ಅಸಮಾಧಾನ ಬರುವುದಿಲ್ಲ. ಮುಂದಿನ ದಿನಗಳಲ್ಲಿ ಅಸಮಾಧಾನ ಇರುವುದಿಲ್ಲ. 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರದಂತೆ ತಡೆಯುವುದೇ ನಮ್ಮ ಗುರಿ, ಎಂದು ತಿಳಿಸಿದರು.