ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಗುಲಿ ಬಾಲಕ ಸಾವು: ಪರಿಹಾರ ನೀಡಲು ಹೈಕೋರ್ಟ್ ಸೂಚನೆ | ಜನತಾ ನ್ಯೂಸ್
ತುಮಕೂರು : ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಘಟನೆಯಲ್ಲಿ ಗಾಯಗೊಂಡಿರುವ ಮತ್ತಿಬ್ಬರು ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಮತ್ತು ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಹೈಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ತುಮಕೂರು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ್ ದಿನಾಚರಣೆ ವೇಳೆ ಧ್ವಜಾರೋಹಣಕ್ಕೆ ಕಂಬ ನಿಲ್ಲಿಸಲು ಸಾಗಿಸುವಾಗ ಲೋಹದ ಕಂಬವು ವಿದ್ಯುತ್ ತಂತಿಗೆ ತಗುಲಿ 16 ವರ್ಷದ ಬಾಲಕ ಚಂದನ್ ಮೃತಪಟ್ಟಿದ್ದ. ಆತನ ಜತೆಗೆ ಕಂಬ ಸಾಗಿಸುತ್ತಿದ್ದ ಪವನ್ ಮತ್ತು ಶಶಾಂಕ್ ಗಾಯಗೊಂಡಿದ್ದರು.
"ಮೃತಪಟ್ಟ ಬಾಲಕನ ಪೋಷಕರಿಗೆ ಕೂಡಲೇ ಪರಿಹಾರ ಒದಗಿಸುವುದನ್ನು ಸರ್ಕಾರ ಪರಿಗಣಿಸಬೇಕು. ಹಾಗೆಯೇ ಉಳಿದ ಇಬ್ಬರು ಗಾಯಾಳು ಬಾಲಕರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಸರ್ಕಾರವೇ ಅದರ ಖರ್ಚು ವೆಚ್ಚ ಭರಿಸಬೇಕು ಎಂದು ಆದೇಶಿಸಿದೆ."