ಪ್ರತಿದಿನ 5 ಲಕ್ಷ ಲಸಿಕೆ ನೀಡಲು ತೀರ್ಮಾನ, ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ: ಡಾ ಕೆ ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಗಸ್ಟ್ ತಿಂಗಳಲ್ಲಿ ಕರ್ನಾಟಕಕ್ಕೆ 1 ಕೋಟಿ 10 ಲಕ್ಷ ಡೋಸ್ ಕರೊನಾ ಲಸಿಕೆ ಬಂದಿದೆ. ಕೇಂದ್ರ ಸರ್ಕಾರ ಮಾತು ಕೊಟ್ಟಂತೆ ಲಸಿಕೆ ಕಳಿಸಿದ್ದಾರೆ. ಇನ್ನು ಮುಂದೆ ಪ್ರತಿದಿನ 5 ಲಕ್ಷ ಲಸಿಕೆ ನೀಡಲು ತೀರ್ಮಾನಿಸಿದ್ದೇವೆ. ಜೊತೆಗೆ, ಪ್ರತಿ ಗುರುವಾರ ಲಸಿಕೆ ಉತ್ಸವ ಮಾಡಲು ನಿರ್ಧರಿಸಿದ್ದು, ಈ ದಿನ 10 ಲಕ್ಷ ಲಸಿಕೆ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಈವರೆಗೆ ಸುಮಾರು 5 ಕೋಟಿ ಕರೊನಾ ಲಸಿಕೆ ಡೋಸ್ಗಳನ್ನು ನೀಡಲಾಗಿದೆ. ಲಸಿಕಾಕರಣ ಹೆಚ್ಚಿಸಲು ಹೊಸ ಕಾರ್ಯತಂತ್ರ ರೂಪಿಸುವ ಬಗ್ಗೆ ಸಮಾಲೋಚನೆ ನಡೆದಿದೆ. ಲಸಿಕಾ ಅಭಿಯಾನ ಯಶಸ್ವಿಯಾಗಲು ಸರ್ಕಾರದ ಜತೆ ಜನ ಕೈಜೋಡಿಸಬೇಕು ಎಂದರು.
ವಾರದಲ್ಲಿ ಒಂದು ದಿನ ಬುಧವಾರ ಲಸಿಕಾ ಉತ್ಸವ ನಡೆಸಿ ಈ ಪ್ರಮಾಣವನ್ನು 5 ದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗುವುದು. ಇದರಿಂದ ಒಂದೂವರೆಯಿಂದ ಎರಡು ಕೋಟಿ ಲಸಿಕೆಯನ್ನು ಒಂದು ತಿಂಗಳಲ್ಲಿ ನೀಡಬಹುದು. ಇಡೀ ದೇಶದಲ್ಲಿ ಲಸಿಕೆ ಕಾರ್ಯ ಪೂರ್ಣಗೊಂಡ ನಗರ ಬೆಂಗಳೂರು ಆಗಬೇಕು ಎಂಬ ಗುರಿ ಇದೆ ಎಂದರು.
ಬೆಂಗಳೂರಿನಲ್ಲಿ ಶೇಕಡ 27 ರಷ್ಟು ಎರಡನೇ ಡೋಸ್ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಲಸಿಕೆ ನೀಡುವುದು ಹಿನ್ನಡೆಯಾಗಿದ್ದು ಆ ಕಡೆ ಹೆಚ್ಚು ಗಮನ ಹರಿಸಲಾಗುವುದು ಎಂದರು.
ಬೆಂಗಳೂರಿನಲ್ಲಿ ಸ್ಲಂ ಪ್ರದೇಶದಲ್ಲಿ ಲಸಿಕೆ ಅಭಿಯಾನ ನಡೆಸಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೊದಲಾದ ಗಡಿಭಾಗದ ಜಿಲ್ಲೆಗಳಲ್ಲಿ ಆದ್ಯತೆ ನೀಡಲಾಗಿದೆ. ಗಡಿ ಭಾಗದ ಜಿಲ್ಲೆಗಳ ಹಳ್ಳಿಗಳಲ್ಲಿ ಲಸಿಕೆ ನೀಡಲಾಗುವುದು. ಕೇರಳ ಭಾಗದ 10 ಕಿಲೋಮೀಟರ್ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಲಸಿಕೆ ಕಡ್ಡಾಯವಾಗಿ ನೀಡಲು ಸೂಚನೆ ಜಾರಿಗೊಳಿಸಲಾಗುವುದು ಎಂದು ಸುಧಾಕರ್ ಹೇಳಿದರು.