ಅ.1 ರಿಂದ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ, ರಾತ್ರಿ ಕರ್ಫ್ಯೂ ಅವಧಿ ಸಡಿಲ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಉನ್ನತ ಮಟ್ಟದ ತಜ್ಞರ ಸಮಿತಿ ಸಭೆ ನಡೆಯಿತು.
ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದಲ್ಲಿನ ಕೋವಿಡ್-19 ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ವನ್ನು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಲಾಗುವುದು. 6 ರಿಂದ 12ನೆ ತರಗತಿ ವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ, ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ದಸರಾ ಬಗ್ಗೆ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು, ಗಡಿಭಾಗಗಳಲ್ಲಿ ಹೆಚ್ಚು ನಿಗಾ, ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ತೀವ್ರಗೊಳಿಸಲು ಜನರಲ್ಲಿ ಲಸಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಅಕ್ಟೋಬರ್ 3 ರಿಂದ ಪಬ್ ಗಳಿಗೆ ಅನುಮತಿ ನೀಡಲು ಹಾಗೂ 1-5 ಶಾಲೆಗಳನ್ನು ಸದ್ಯಕ್ಕೆ ತೆರೆಯದಿರಲು ನಿರ್ಧರಿಸುವುದಾಗಿ ಹೇಳಿದರು.
ಚಿತ್ರಮಂದಿರಕ್ಕೆ ಬರುವವರು ಕೊವಿಡ್ ಒಂದು ಡೋಸ್ಪಡೆದಿರುವುದು ಕಡ್ಡಾಯವಾಗಿದೆ. ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಾದರೆ ಶೇ.50ರಷ್ಟು ಸೀಟ್ ಭರ್ತಿಗೆ ಮಾತ್ರ ಅವಕಾಶ, ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು, ಚಿತ್ರಮಂದಿರಕ್ಕೆ ಗರ್ಭಿಣಿಯರಿಗೆ, ಮಕ್ಕಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು.
ಪಬ್ಗಳಿಗೂ ಇದೇ ಮಾನದಂಡ ಅನುಸರಿಸಲಾಗುವುದು. ಕನಿಷ್ಟ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ. ಗರ್ಭಿಣಿಯರು ಮತ್ತು ಮಕ್ಕಳಿಗೆ ಪಬ್ಗಳಿಗೆ ಪ್ರವೇಶಕ್ಕೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. ನೈಟ್ ಕರ್ಫ್ಯೂವನ್ನ ರಾತ್ರಿ 10 ರಿಂದ ಬೆಳಿಗ್ಗೆ 5 ರ ವರೆಗೆ ನಿಗದಿ ಪಡಿಸಲಾಗುವುದು. 6 ರಿಂದ 12 ನೇ ತರಗತಿ ವರೆಗೆ ಶೇ.100 ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಯಿತು. ವಾರದಲ್ಲಿ ಐದು ದಿನ ಶಾಲಾ-ಕಾಲೇಜು ನಡೆಸಲು ನಿರ್ಧರಿಸಲಾಯಿತು.