ರಾಜ್ಯೋತ್ಸವ ಪ್ರಶಸ್ತಿಗೆ ಆನ್ ಲೈನ್ ಮೂಲಕ ಸಾರ್ವಜನಿಕರೇ ಸಾಧಕರನ್ನು ಶಿಫಾರಸ್ಸು ಮಾಡಲು ಅವಕಾಶ! | ಜನತಾ ನ್ಯೂಸ್
ಬೆಂಗಳೂರು : ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಈ ಬಾರಿ ವಿಶೇಷವಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆನ್ ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಈ ವರ್ಷ 66 ಅರ್ಹ ಸಾಧಕರನ್ನು ಗುರುತಿಸಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ, ಸಾರ್ವಜನಿಕರು ಯಾರೇ ಆಗಲಿ ಅವರು ಸೇವಾ ಸಿಂಧು ಪೋರ್ಟಲ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಿದ್ಧಪಡಿಸಲಾಗಿರುವ ವಿಶೇಷ ನಮೂನೆಯ ಅರ್ಜಿಯಲ್ಲಿ ಮೂರು ಹೆಸರುಗಳನ್ನು ಶಿಫಾರಸು ಮಾಡಬಹುದಾಗಿದೆ.
ಈ ಮೂವರು ಸಾಧಕರ ಹೆಸರು, ಅವರು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ, ಅವರ ಊರು , ವಿಳಾಸ, ಸಂಪರ್ಕ ಸಂಖ್ಯೆಇತ್ಯಾದಿ ವಿವರಗಳನ್ನು ಒದಗಿಸಲು ಈ ಅರ್ಜಿ ನಮೂನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಅದರ ಜೊತೆಗೆ ಈ ಪ್ರತಿಷ್ಠಿತ ಪ್ರಶಸ್ತಿಗೆ ನೇರವಾಗಿ ಸಾರ್ವಜನಿಕರೇ ಸಾಧಕರನ್ನು ಆಯ್ಕೆ ಮಾಡಿದಂತಾಗುತ್ತದೆ, ಕ್ರೀಡೆ ಹೊರತುಪಡಿಸಿದರೆ ಉಳಿದ ಸಾಧಕರು ಕನಿಷ್ಠ 60 ವರ್ಷ ಮೇಲ್ಪಟ್ಟವರಾಗಿರಬೇಕು ಎಂದು ಸಚಿವ ಸುನಿಲ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂತಹ ಪ್ರಯೋಗ ಇದೇ ಮೊದಲ ಬಾರಿಗೆ ಮಾಡಲಾಗುತ್ತಿದ್ದು, ಇದು ಅತ್ಯಂತ ಪಾರದರ್ಶಕ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದ್ದಾರೆ