ಹುಚ್ಚಾಸ್ಪತ್ರೆಯಲ್ಲಿ ಈಶ್ವರಪ್ಪ ಹಾಸಿಗೆ ವ್ಯವಸ್ಥೆ ಕಲ್ಪಿಸಿದರೆ ನಾ ಹೋಗಿ ದಾಖಲಾಗುತ್ತೇನೆ : ಡಿ ಕೆ ಶಿವಕುಮಾರ್ | ಜನತಾ ನ್ಯೂಸ್
ಬೆಂಗಳೂರು : ದೇವನಹಳ್ಳಿಯಲ್ಲಿ ನಡೆದ ಗಾಣಿಗ ಸಮುದಾಯದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಹುಚ್ಚಾಸ್ವತ್ರೆಗೆ ಸೇರಿಸಬೇಕು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೂ ಡಿಕೆಶಿ ತಿರುಗೇಟು ಕೊಟ್ಟರು. ನಾನು ಹುಚ್ಚಾಸ್ವತ್ರೆಗೆ ಹೋಗಲು ಸಿದ್ದನಾಗಿದ್ದೇನೆ, ಈಶ್ವರಪ್ಪ ಆದಷ್ಟು ಬೇಗ ಬೆಡ್ ರೆಡಿ ಮಾಡಿಟ್ಟಿರಲಿ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು, 20 ಕಾಂಗ್ರೆಸ್ ಜನ ಶಾಸಕರು ಸಂಪರ್ಕದಲ್ಲಿದ್ದಾರೆ ಅಂತ. ಮತ್ಯಾಕೆ ಅವರಿಗೆ ಭಯ ಶುರುವಾಗಿದೆ ಗೊತ್ತಿಲ್ಲ. ನಾವಂತು ಯಾವ ಶಾಸಕರು ಸಂಪರ್ಕದಲ್ಲಿದ್ದಾರೆ ಅಂತ ಹೇಳಿಲ್ಲ ಎಂದರು.
ಈ ರಾಜ್ಯದ ಚರಿತ್ರೆಯನ್ನೇ ತೆಗೆದುಕೊಂಡರೆ ದೇವರಾಜ ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್, ಗುಂಡೂರಾಯರು, ಸಿದ್ದರಾಮಯ್ಯ ಪ್ರತಿನಿಧಿಸುವ ಸಮಾಜಕ್ಕೆ ಯಾವುದಾದರೂ ಪಕ್ಷ ಅಧಿಕಾರ ಕೊಟ್ಟಿದೆ ಎಂದರೆ ಅದು ಕಾಂಗ್ರೆಸ್ ಮಾತ್ರ ಎಂದು ನೇರವಾಗಿ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟಾಂಗ್ ನೀಡಿದರು.
ಕಾಂಗ್ರೆಸ್ ಎಲ್ಲ ವರ್ಗದ ಪರ ಕಾರ್ಯಕ್ರಮ ರೂಪಿಸುತ್ತದೆ. ಬಿಜೆಪಿಯಲ್ಲಾಗಲಿ, ಜನತಾದಳದಲ್ಲಾಗಲಿ ಒಕ್ಕಲಿಗರು ಹಾಗೂ ಲಿಂಗಾಯತರನ್ನು ಹೊರತುಪಡಿಸಿ ಬೇರೆ ಸಮುದಾಯದವರಿಗೆ ಅಧಿಕಾರ ನೀಡಿರುವ ಒಂದು ಉದಾಹರಣೆ ನೀಡಲಿ. ಅವರಿಗೆ ಆ ಇತಿಹಾಸವೇ ಇಲ್ಲ. ನಮ್ಮ ಪಕ್ಷ ಕಾಲಕಾಲಕ್ಕೆ ಆಯಾ ಸಮುದಾಯಕ್ಕೆ ನಾಯಕತ್ವ, ರಾಜಕೀಯ ಪಾಲುದಾರಿಕೆ, ಮೀಸಲಾತಿ ಕಲ್ಪಿಸಿದೆ ಎಂದರು.