ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಕರ್ತವ್ಯ, ನಾನು ಯಾರನ್ನೂ ದೂಷಿಸುವುದಿಲ್ಲ: ಡಿ ಕೆ ಶಿವಕುಮಾರ್ | ಜನತಾ ನ್ಯೂಸ್
ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದೇ ತಮ್ಮ ಗುರಿ. ಉಳಿದಂತೆ ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ಆ ಬಗ್ಗೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸಲೀಂ ಹಾಗೂ ವಿ.ಎಸ್ ಉಗ್ರಪ್ಪ ಅವರ ಸಂಭಾಷಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಇಂದು ಮತ್ತೊಮ್ಮೆ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಬಿಜೆಪಿ ಅವರನ್ನಾಗಲಿ, ಮಾಧ್ಯಮಗಳನ್ನಾಗಲಿ ದೂಷಿಸುವುದಿಲ್ಲ. ನಾವು ಅವಕಾಶ ಕೊಟ್ಟಿದ್ದರಿಂದ ಬೇರೆಯವರು ಬಳಸಿಕೊಂಡಿದ್ದಾರೆ. ನಾನು ಯಾರನ್ನೂ ದೂಷಣೆ ಮಾಡುವುದಿಲ್ಲ. ಇದು ನನ್ನ ವೈಯಕ್ತಿಕವಾದುದಲ್ಲ, ಪಕ್ಷದ ವಿಚಾರ. ಈ ಪಕ್ಷವನ್ನು ನಾನು ಮಾತ್ರ ಕಟ್ಟಿಲ್ಲ. ಹಳ್ಳಿಯ ಲಕ್ಷಾಂತರ ಜನ, ಕಾರ್ಯಕರ್ತರು ಈ ಪಕ್ಷ ಕಟ್ಟಿ ಬೆಳೆಸಿದ್ದಾರೆ ಎಂದರು.
ಯಾರು ಏನು ಮಾತನಾಡುತ್ತಾರೋ ಮಾತನಾಡಲಿ. ಕಳೆದ ಎರಡು ವರ್ಷಗಳಿಂದ ಯಾರು ಏನೆಲ್ಲ ಮಾತನಾಡಿದ್ದಾರೆ ಅದನ್ನೂ ನೋಡಲಿ. ವಿಧಾನ ಪರಿಷತ್ ಸದಸ್ಯರಾದ ಹೆಚ್. ವಿಶ್ವನಾಥ್, ಸಿ ಪಿ ಯೋಗೀಶ್ವರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾತನಾಡಿದರಲ್ಲ, ಅದಕ್ಕೆ ಉತ್ತರ ಯಾಕಿಲ್ಲ?. ಯತ್ನಾಳ್ ಅವರ ಹೇಳಿಕೆಗೆ ಸಿ.ಟಿ ರವಿ ಅವರಾಗಲಿ, ಈಗ ಮಾತನಾಡುತ್ತಿರುವವರಾಗಲಿ ಯಾಕೆ ಉತ್ತರ ನೀಡಲಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಲೆಕ್ಷನ್, ಅವರ ಮೊಮ್ಮಗನ ಬಗ್ಗೆ ಮಾತನಾಡಿದಾಗ ಇವರ ಧ್ವನಿ ಏನು ಬಿದ್ದು ಹೋಗಿತ್ತಾ? ಆಗ್ಯಾಕೆ ಮಾತನಾಡಲಿಲ್ಲ? ಎಂದು ಪ್ರಶ್ನಿಸಿದರು.