ಮಳೆ ಹಾನಿ ಸಮೀಕ್ಷಾ ವರದಿ ಪರಿಶೀಲಿಸಿ ಪರಿಹಾರ ಘೋಷಣೆ, ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿಯ ಮೇಲೆ ಪರಿಹಾರದ ಬಗ್ಗೆ ಚರ್ಚಿಸಿ, ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಅನಿರೀಕ್ಷಿತವಾಗಿ ಅಕಾಲಿಕವಾಗಿ ವಾಯುಭಾರ ಕುಸಿತದಿಂದ ದಕ್ಷಿಣ , ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯಾಗಿದೆ. ಕಳೆದ ಮೂರು ದಿನಗಳಲ್ಲಿ ಒಳನಾಡಿನಲ್ಲಿ ಹೆಚ್ಚು ಮಳೆಯಾಗಿ ಬೆಳೆ ಹಾನಿ, ರಸ್ತೆ ಹಾಗೂ ಪ್ರಾಣ ಹಾನಿ ಕೂಡಾ ಆಗಿದೆ. ಮಳೆ ಹಾನಿಯ ಬಗ್ಗೆ ಸಮೀಕ್ಷೆ ವರದಿಯಲ್ಲಿ ಮಾಹಿತಿ ಬಂದಿದೆ. ಇದನ್ನು ಪರಿಶೀಲನೆ ನಡೆಸಿ ಪರಿಹಾರ ಘೋಷಣೆ ಮಾಡಲಾಗುವುದು ಎಂದರು. ಈ ಕುರಿತು ಇಂದು ಸಂಜೆ ಸಬೆ ನಡೆಸಿ ಚರ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.
ಜುಲೈ ಆಗಸ್ಟ್, ಸೆಪ್ಟಂಬರ್ ತಿಂಗಳಲ್ಲಿ ಮಳೆ ಹಾನಿಯಿಂದ 3 ಲಕ್ಷ ರೈತರ ಜಮೀನು ನಾಶವಾಗಿತ್ತು. ಅವರಿಗೆ ಈಗಾಗಲೇ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಈ ಪೈಕಿ 130 ಕೋಟಿ ಬಾಕಿ ಇತ್ತು ಅದನ್ನು ಕೂಡಾ ಬಿಡುಗಡೆ ಮಾಡಲು ಆದೇಶ ಮಾಡಲಾಗಿದೆ ಎಂದು ತಿಳಿಸಿದರು.
ಇಂದು ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದಿದ್ದಾರೆ. ಪ್ರವಾಹ, ಬೆಳೆ ಹಾನಿಗೆ ಸಂಬಂಧಿಸಿದಂತೆ ಚರ್ಚಿಸಲು ಗೃಹ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ , ಕೃಷಿ , ಸಣ್ಣ ನೀರಾವರಿ, ವಸತಿ ಇಲಾಖೆಗಳ ಮುಖ್ಯಸ್ಥರಿಗೆ ಸಭೆಯಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರಿಗೂ ಸಭೆಗೆ ಹಾಜರಾಗಲು ತಿಳಿಸಲಾಗಿದೆ.