ಅತಿಥಿ ಉಪನ್ಯಾಸಕರಿಗೆ ಶೀಘ್ರದಲ್ಲೇ ಸಿಹಿಸುದ್ದಿ: ಸಚಿವ ಅಶ್ವತ್ಥನಾರಾಯಣ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ನಾರಾಯಣ ಹೇಳಿದ್ದಾರೆ.
ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಸಚಿವರ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ಗಂಟೆಗಳ ಸಭೆಯ ನಂತರ ಅಶ್ವತ್ಥ ನಾರಾಯಣ ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ಹಲವು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.
ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ಈ ಕುರಿತ ವಿಷಯವನ್ನು ಚರ್ಚಿಸಲಾಗಿದ್ದು, ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು. ನಂತರ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.