ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಲ್ಲೂ ಪ್ರತಿಭಟನೆ, ಮೆರವಣಿಗೆ ನಡೆಸಬಾರದು: ಹೈಕೋರ್ಟ್ ಆದೇಶ | ಜನತಾ ನ್ಯೂಸ್
ಬೆಂಗಳೂರು : ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆ ಅಥವಾ ಗುಂಪು ಯಾವುದೇ ಪ್ರತಿಭಟನೆ, ಮೆರವಣಿಗೆ ಅಥವಾ ಸಭೆಗಳನ್ನು ನಡೆಸಬಾರದು ಎಂದು ಹೈಕೋರ್ಟ್ ಗುರುವಾರ ಮಹತ್ವದ ಆದೇಶ ಹೊರಡಿಸಿದೆ.
ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಪ್ರತಿ ಬಾರಿ ಪಾದಯಾತ್ರೆ-ಪ್ರತಿಭಟನೆ ಕೈಗೊಂಡಾಗಲೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ಈ ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಾದ ಆಲಿಸಿದ ಪೀಠ, ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಪಾದಯಾತ್ರೆ-ಪ್ರತಿಭಟನೆಗಳನ್ನು ನಿಯಮಾನುಸಾರ ನಡೆಸಬಹುದು. ಆದರೆ, ಈ ಪ್ರತಿಭಟನೆಗಳಿಂದ ನಗರದ ಜನಸಾಮಾನ್ಯರ ಸಂಚಾರ ಹಾಗೂ ದಿನನಿತ್ಯದ ಚಟುವಟಿಕೆಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಹೀಗಾಗಿ. ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರು ನಗರದ ಯಾವುದೇ ಭಾಗದಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶಿಸಿತು.
ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರ ಕಡೆ ಪ್ರತಿಭಟನೆ ಅಥವಾ ಅಂತಹ ಯಾವುದೇ ಚಟುವಟಿಕೆಗಳನ್ನು ನಡೆಸಿದರೆ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಮತ್ತು ಕ್ರಮ ತೆಗೆದುಕೊಂಡ ಬಗ್ಗೆ ನ್ಯಾಯಾಲಯಕ್ಕೆ ವರದಿ ನೀಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.