ಉನ್ನತ ಶಿಕ್ಷಣ, ರಾಜಕಾರಣಿಗಳು, ಶ್ರೀಮಂತರಿಗೆ ದುಡ್ಡು ಸಂಗ್ರಹಿಸುವ ಹುಂಡಿಯಾಗಿದೆ | JANATA NEWS
ಬೆಂಗಳೂರು : ರಾಜಕಾರಣಿಗಳು, ಶ್ರೀಮಂತರಿಗೆ ಉನ್ನತ ಶಿಕ್ಷಣವು ದುಡ್ಡು ಸಂಗ್ರಹ ಮಾಡುವ ಹುಂಡಿಯಾಗಿದೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಉಕ್ರೈನ್ ನಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿ ನವೀನ್ ನ ಮೃತ ದೇಹ ಇಂದು ಭಾರತಕ್ಕೆ ಬಂದಿದ್ದು ಈ ಕುರಿತು ಟ್ವೀಟ್ ಮಾಡಿ ಸರಕಾರದ ವಿರುದ್ಧ ಕಿಡಿಕಾರಿದ ಅವರು, ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಒತ್ತೆ ಇಟ್ಟ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಸಗಿದ ಪಾಪಕ್ಕೆ ಮುಗ್ಧ ವಿದ್ಯಾರ್ಥಿ ನವೀನ್ ಬಲಿ ಆಗಿದ್ದಾನೆ ಎಂದರು.
ದೂರದ ಉಕ್ರೇನ್ ದೇಶದಲ್ಲಿ ಜೀವ ಚೆಲ್ಲಿ ಹುಟ್ಟಿದೂರಿನಲ್ಲಿ ನಿಶ್ಚಲವಾಗಿ ಮಲಗಿದ್ದ ನವೀನ್ ಭಾರತದ ಆತ್ಮಸಾಕ್ಷಿಗೆ ಎದುರಾಗಿರುವ ದೊಡ್ಡ ಪ್ರಶ್ನೆ. ವಿದ್ಯೆ ಹೆಸರಿನಲ್ಲಿ ದಂಧೆ ನಡೆಸುವ ದುರಾಸೆಗೂ ಒಂದು ಸವಾಲು. ಹಾಗಾದರೆ, ಇನ್ನೆಷ್ಟು ನವೀನರು ಬಲಿಯಾಗಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿದ್ದಾರೆ. ಹಾಗಾದರೆ, ಅಂತಹ ಕಾಲೇಜುಗಳಿಗೆ ಶಕ್ತಿ ತುಂಬುತ್ತಿರುವುದು ಏಕೆ?. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕನ್ನಡದ ಮಕ್ಕಳಿಗೆ ಸೀಟು ಸಿಗುತ್ತಿಲ್ಲ. ಟ್ಯೂಷನ್ಗಳಿಗೆ ಲಕ್ಷ ಲಕ್ಷ ಕಟ್ಟುವುದು ಬಡ, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿಲ್ಲ ಎಂದಿದ್ದಾರೆ.
ಮೂತಿಗೆ ತುಪ್ಪ ಸವರುವಂತೆ ವೈದ್ಯ ಶಿಕ್ಷಣದ ಶುಲ್ಕವನ್ನು ಅಲ್ಪಸ್ವಲ್ಪ ಕಡಿಮೆ ಮಾಡಿ ಸದ್ಯಕ್ಕೆ ಪಾರಾಗುವುದಲ್ಲ. ನವೀನ್ ಸಾವಿನಿಂದ ಪಾಠ ಕಲಿತು ಅದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಹಾಗೂ ನೀಟ್ನಿಂದ ಹೊರ ಬರಲು ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.