ಭಗತ್ ಸಿಂಗ್ ಪಠ್ಯ ಬಿಟಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ | JANATA NEWS
ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠಗಳನ್ನು ಪುಸ್ತಕದಿಂದ ಕೈಬಿಟ್ಟು ಆರ್ಎಸ್ಎಸ್ ಸಂಸ್ಥಾಪಕ ಹೆಡಗೆವಾರ್ ಕುರಿತ ಪದ್ಯವನ್ನು ಪಠ್ಯದಲ್ಲಿ ಸೇರಿಸಲಾಗಿದೆ ಎನ್ನುವ ಆರೋಪಕ್ಕೆ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.
ಪಠ್ಯಪುಸ್ತಕದಲ್ಲಿ ಹೆಡಗೇವಾರ್ ಭಾಷಣ ಇರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅದನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ಪುಸ್ತಕ ಈಗಾಗಲೇ ಮುದ್ರಣಕ್ಕೆ ಹೋಗಿದೆ. ಯುವ ಮನಸ್ಸುಗಳು ಕೇವಲ ವ್ಯಕ್ತಿಗಳನ್ನು ಆದರ್ಶವಾಗಿ ತೆಗೆದುಕೊಳ್ಳುವ ಬದಲು ಸ್ಫೂರ್ತಿದಾಯಕವಾದ ಸಿದ್ಧಾಂತವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ಭಗತ್ ಸಿಂಗ ಪಠ್ಯ ಬಿಟ್ಟಿಲ್ಲ: ಭಗತ್ ಸಿಂಗ್ ಕುರಿತ ವಿಷಯವನ್ನು ಪಠ್ಯಪುಸ್ತಕಗಳಿಂದ ತೆಗೆದುಹಾಕಲಾಗಿದೆ ಎಂಬುದು ಸುಳ್ಳು, ಕೆಲವರು ಪಠ್ಯಪುಸ್ತಕಗಳಲ್ಲಿ ತಮ್ಮದೇ ಆದ ಸಿದ್ಧಾಂತವನ್ನು ಸೇರಿಸಲು ಬಯಸುತ್ತಿರುವುದರಿಂದ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಸಮಿತಿಯು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕ ಪರಿಷ್ಕರಿಸಿರುತ್ತಾರೆ.
10ನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿದ್ದ 'ಭಗತ್ಸಿಂಗ್' ಗದ್ಯವನ್ನು ಕೈಬಿಟ್ಟು 'ಹೆಡಗೆವಾರ್'ರವರ ಬಗ್ಗೆ ಗದ್ಯ ಸೇರಿಸಲಾಗಿದೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾದುದು. ವಾಸ್ತವವಾಗಿ 'ಭಗತ್ಸಿಂಗ್' ಗದ್ಯವನ್ನು ಪಠ್ಯದಿಂದ ಕೈಬಿಟ್ಟಿಲ್ಲ. ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ಇನ್ನೂ ಮುದ್ರಣ ಹಂತದಲ್ಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.