ಜನರ ಉಳಿವಿಗಾಗಿ 2023ರಲ್ಲಿ ನಾವು ಗೆಲ್ಲಲೇಬೇಕು: ಸಿದ್ದರಾಮಯ್ಯ | JANATA NEWS
ಬೆಂಗಳೂರು : 2023ರ ಏಪ್ರಿಲ್ - ಮೇ ಗೆ ವಿಧಾನಸಭಾ ಚುನಾವಣೆ ಬರುತ್ತದೆ, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದು ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ಗೆಲ್ಲುವುದಲ್ಲ, ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ನಮ್ಮ ಪಕ್ಷ 6 ಕಮಿಟಿಗಳನ್ನು ಮಾಡಿದೆ, ಇವುಗಳು ಸುದೀರ್ಘ ಚರ್ಚೆ ನಡೆಸಿ ತನ್ನ ನಿರ್ಣಯಗಳನ್ನು ಮಾಡಿ, ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ.
ನನಗಿರುವ ಮಾಹಿತಿ ಪ್ರಕಾರ ರಾಜ್ಯ ಸರ್ಕಾರಕ್ಕೆ ಈ ಚುನಾವಣೆಯನ್ನು ನಡೆಸಲಾಗಲೀ ಅಥವಾ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡಲು ಒಲವಿಲ್ಲ. ಕಾಂಗ್ರೆಸ್ ಗೆ ಮಾತ್ರ ಈ ಬದ್ಧತೆ ಇರುವುದು. ಬಿಜೆಪಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಇಂದು ರಾಜ್ಯ ಮತ್ತು ದೇಶ ಸಾಲದ ಸುಳಿಯಲ್ಲಿ ಸಿಕ್ಕಿಕೊಂಡಿದೆ. 2014-15ರಲ್ಲಿ ಈ ದೇಶದ ಮೇಲಿದ್ದ ಒಟ್ಟು ಸಾಲ 53 ಲಕ್ಷ ಕೋಟಿ ರೂಪಾಯಿ. ಇಂದು ಈ ಸಾಲ 155 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದರು.
ನಾವು ಅಧಿಕಾರಕ್ಕೆ ಬರುವಾಗ ರಾಜ್ಯದ ಜಿಡಿಪಿ 6 ಲಕ್ಷ ಕೋಟಿ ರೂಪಾಯಿಗೆ ಇತ್ತು, ನಾವು ಅಧಿಕಾರದಿಂದ ಇಳಿಯುವಾಗ 14 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿತ್ತು. 2020-21ರಲ್ಲಿ -5% ಬೆಳವಣಿಗೆ ಕಂಡಿದೆ. ಇದು ರಾಜ್ಯವನ್ನು ಸಾಲದ ಸುಳಿಗೆ ಸಿಕ್ಕಿಸಿ, ಆರ್ಥಿಕವಾಗಿ ದಿವಾಳಿ ಮಾಡಲಾಗುತ್ತಿದೆ ಎಂಬುದನ್ನು ತೋರಿಸುತ್ತದೆ.
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಗೊಬ್ಬರ, ಸಿಮೆಂಟ್ ಹೀಗೆ ಎಲ್ಲದರ ಬೆಲೆ ಗಗನಕ್ಕೇರಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ತಪ್ಪು ಆರ್ಥಿಕ ನೀತಿ ಮತ್ತು ಅದನ್ನು ರಾಜ್ಯ ಸರ್ಕಾರ ಅನುಸರಿಸುತ್ತಿರುವುದು ಎಂದು ಕಿಡಿಕಾರಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ಯುವಕರು, ಮಕ್ಕಳು, ರೈತರು ಸಮಸ್ಯೆಯಲ್ಲಿದ್ದಾರೆ. ಇವುಗಳನ್ನು ಮುಚ್ಚಿಡಲು ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತಂದಿದ್ದಾರೆ. ಇಂದು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಆತಂಕದಲ್ಲಿ ಬದುಕುವಂತಾಗಿದೆ.
ಚರ್ಚ್, ಮಸೀದಿಗಳ ಮೇಲೆ ದಾಳಿ, ಹಿಂದೂಗಳನ್ನು ಅಲ್ಪಸಂಖ್ಯಾತರ ವಿರುದ್ಧ ಎತ್ತಿಕಟ್ಟುವ ಕೆಲಸ ದೇಶದ ಉದ್ದಗಲಕ್ಕೂ ನಡೀತಿದೆ. ಹೀಗಾಗಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ತೆಗೆಯಬೇಕಾಗಿದೆ. ಸಂವಿಧಾನದ ಆಶಯಗಳಲ್ಲಿ ನಂಬಿಕೆ, ಬದ್ಧತೆ ಇಲ್ಲದವರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು.