ಕಾಲೇಜ್ ಬಸ್ಸಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ: 20 ಕ್ಕೂ ಹೆಚ್ಚು ಜನರಿಗೆ ಗಾಯ, ಇಬ್ಬರು ಗಂಭೀರ | JANATA NEWS
ಬೆಳಗಾವಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾಲೇಜೊಂದರ ವ್ಯಾನಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಳಗಾವಿ ಜಿಲ್ಲೆ ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅ ಗುರ್ಲಪೂರ ಗ್ರಾಮದ ಮೂಲಕ ಹಾದುಹೋಗುವ ಜತ್ತ-ಜಾಬೋಟಿ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿದೆ.
ಕೆ ಎಸ್ ಆರ್ ಟಿಸಿ ಬಸ್ ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡದ್ದಿರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಕಾಲೇಜು ಬಸ್ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿಲ್ಲಿಸಿದಾಗ ಕೆ ಎಸ್ ಆರ್ ಟಿಸಿ ಬಸ್ ಹಿಂಬದಿಗೆ ಗುದ್ದಿದ ಪರಿಣಾಮ ಕಾಲೇಜ್ ಬಸ್ಸಿನಲ್ಲಿದ್ದ 10 ಹಾಗೂ ಸರ್ಕಾರಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ . ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.