ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ | JANATA NEWS
ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅನಾನುಕೂಲವಾಗುವ ಕಡೆಗಳಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದೆ.
ಮಂಗಳೂರು, ಬೆಳ್ತಂಗಡಿ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ 24ಗಂಟೆಯಿಂದಲೂ ನಿರಂತರವಾಗಿ ಗುಡುಗು, ಮಿಂಚು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಲೇ ಇದೆ. ಹಲವೆಡೆ ತಗ್ಗು ಪ್ರದೇಶಗಳು ತುಂಬುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.
ಇದರಿಂದ ಮಕ್ಕಳ ಸಂಚಾರಕ್ಕೆ ತೊಂದರೆ ಆಗುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಜೆ ಘೋಷಿಸಿದ್ದಾರೆ.
ಬುಧವಾರದಿಂದ ಗುರುವಾರ ಬೆಳಗ್ಗೆ 8.30ರ ವೇಳೆಗೆ ಉಡುಪಿ ಜಿಲ್ಲೆಯ ನಾಡಾದಲ್ಲಿ 24.8ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಮಾವಳ್ಳಿಯಲ್ಲಿ 21ಸೆಂ.ಮೀ ಅಧಿಕ ಮಳೆ ಸುರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮುಂದಿನ ನಾಲ್ಕು ದಿನ ಮುಂದುವರಿಯಲಿದೆ. ಕರಾವಳಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬೀಳಲಿರುವ ಕಾರಣಕ್ಕೆ ಶುಕ್ರವಾರ ಈ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.