ರೈಲಿಗೆ ಸಿಲುಕಿ ಕಾಲೇಜು ವಿದ್ಯಾರ್ಥಿನಿ ಸಾವು, ವಿದ್ಯಾರ್ಥಿಗಳ ಪ್ರತಿಭಟನೆ | JANATA NEWS
ಹಾಸನ : ರೈಲು ಹಳಿ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಹಾಸನದ ಮೊಸಳೆ ಹೊಸಹಳ್ಳಿಯಲ್ಲಿ ನಡೆದಿದೆ.
ಗುಡ್ಡೆತೆರಣ್ಯ ಗ್ರಾಮದ ಪ್ರೀತಿ (18) ಮೃತ ದುರ್ದೈವಿ. ವಿದ್ಯಾರ್ಥಿಯು ರೈಲ್ವೆ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ಮೊಸಳೆಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರೀತಿ ಸೋಮವಾರ ಕಾಲೇಜಿಗೆ ಹೋಗುವಾಗ ಹಾಸನ ತಾಲೂಕಿನ ಅಂಕಪುರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ.
ಈ ಸಾವಿಗೇ ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಮೇಲ್ಸೇತುವೆ ನಿರ್ಮಾಣ ಮಾಡಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ ಎಂದು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ರಸ್ತೆಯಲ್ಲಿ ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
ಜೀವ ಕೈಯಲ್ಲಿ ಹಿಡಿದುಕೊಂಡೇ ರೈಲ್ವೆ ಹಳಿ ದಾಟಿ ಕಾಲೇಜಿಗೆ ಹೋಗಬೇಕಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಮೇಲ್ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.