ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್! | JANATA NEWS
ಬೆಂಗಳೂರು : ಕೋಲಾರ ಜಿಲ್ಲೆಯ ಯರಗೊಳ್ ಯೋಜನೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ತಮ್ಮ ವಿರುದ್ಧ ಅಸಂಬದ್ಧವಾಗಿ ನಾಲಿಗೆ ಜಾರಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ, "ಮಾಜಿ ಸ್ಪೀಕರ್ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ"ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
"ಕೆಆರ್ಎಸ್, ಎತ್ತಿನಹೊಳೆ, ಕೆಸಿ ವ್ಯಾಲಿ, ಹೆಚ್ಎಎಲ್, ಹೆಚ್ ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ. ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ. ಬಾಲಂಗೋಚಿ ಆಗದಿದ್ದರೆ ರಾಜಕೀಯ ಉಳಿಗಾಲವಿಲ್ಲ. ಪರಾವಾಲಂಬಿ ರಾಜಕಾರಣದ ಕೇರ್ ಆಫ್ ಅಡ್ರೆಸ್ ಆಗಿರುವ ನೀವು ಯಾರ ಕೃಪೆಯಲ್ಲಿದ್ದಿರಿ ಎನ್ನುವುದನ್ನು ಬಿಡಿಸಿ ಹೇಳಬೇಕೆ"ಎಂದು ಕುಮಾರಸ್ವಾಮಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೋಲಾರ ಜಿಲ್ಲೆಗೆ ನೀವು ಮಾಡಿದ ಘೋರ ಅನ್ಯಾಯ, ಎಸಗಿದ ಪಾಪ ಕಣ್ಮುಂದೆಯೇ ಇದೆ. ಎತ್ತಿನಹೊಳೆ ಹರಿಸುತ್ತೇನೆ ಎಂದು ನಂಬಿಸಿ ಕೆರೆಗಳ ತುಂಬಾ ವಿಷವನ್ನು ತುಂಬಿಸಿದ ಧೂರ್ತ ಕೃತ್ಯಕ್ಕೆ ಕಾರಣರು ಯಾರು? ಕೆಸಿ ವ್ಯಾಲಿ ಎತ್ತುವಳಿ ಲೆಕ್ಕ ತೆಗೆದರೆ ಮುಖ ಎಲ್ಲಿ ಇಟ್ಟುಕೊಳ್ಳುತ್ತೀರಿ ಸ್ವಯಂ ಘೋಷಿತ ಸಂವಿಧಾನ ತಜ್ಞರೇ? ಎಂದು ರಮೇಶ್ ಕುಮಾರ್ʼಗೆ ಚಾಟಿ ಬೀಸಿದ್ದಾರೆ ಮಾಜಿ ಮುಖ್ಯಮಂತ್ರಿಗಳು.
3 ವರ್ಷಗಳಲ್ಲಿ ನೀರು ಹರಿಸುತ್ತೇವೆ ಎಂದು ಬೂಸಿಬಿಟ್ಟು, ಜನಕ್ಕೆ ಮಂಕುಬೂದಿ ಎರಚಿ ಎತ್ತಿನಹೊಳೆ ಹೆಸರಿನಲ್ಲಿ ನಡೆಸಿದ ಎತ್ತುವಳಿಕಾಂಡವನ್ನು ಬಿಚ್ಚಿಡಬೇಕೆ? ಗುತ್ತಿಗೆದಾರರ ಹಿಂದೆ ಸುತ್ತಿದ ಬೇತಾಳ ಕಥೆಯನ್ನು ಹೇಳಬೇಕೆ? ಇದೆಲ್ಲವನ್ನು ಅಧ್ಯಾಯಗಳಂತೆ ಆರಂಭಿಸಬೇಕೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.