ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಸರ್ಕಾರ ಆದೇಶ | JANATA NEWS
ಬೆಂಗಳೂರು : ರಾಜ್ಯದಲ್ಲಿ ನೂತನ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುವ, ವಲಸೆ ಮತ್ತು ಭೂಮಿ ರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರದಲ್ಲಿ 1655 ಮತ್ತು ನಗರ ಪ್ರದೇಶದಲ್ಲಿ 2589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲು ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಇನ್ನು ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳು ಮತ್ತು ವಲಸೆ & ಭೂರಹಿತ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನು ತೆರೆಯಲು 268.98 ಕೋಟಿ ರೂಪಾಯಿಗಳ ಅನುದಾನ ಮೀಸಲಿಟ್ಟಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್, ಪ್ರಧಾನಿ ನರೇಂದ್ರ ಮೋದಿ ಅವರ ಪೋಷಣ್ ಮಾಸಾಚರಣೆಯ ಘೋಷಣೆಯ ಬೆನ್ನಲ್ಲೇ ಈ ಅಧಿಕೃತ ಆದೇಶ ಹೊರಡಿಸಿರುವುದು ಬಹಳ ಸಂತಸದ ವಿಷಯವಾಗಿದೆ.
ಕರ್ನಾಟಕ ಅಂಗನವಾಡಿ ಮತ್ತು ಪೋಷಣ್ ಅಭಿಯಾನ 2.0 ಎಂದು ಮರುನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯನ್ನು 1975 ರಲ್ಲಿ ಪ್ರಾರಂಭಿಸಲಾಗಿತ್ತು.
ಪ್ರಸ್ತುತ ರಾಜ್ಯದಲ್ಲಿ ಈ ಯೋಜನೆಯ ಅಡಿ ಒಟ್ಟು 66,361 ಅಂಗನವಾಡಿ ಕೇಂದ್ರಗಳು ಸ್ಥಾಪಿತವಾಗಿದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ.
ಪ್ರಸ್ತುತ ಈ ಯೋಜನೆಯ ಅಡಿ ಶೇಕಡಾ 56 ರಷ್ಟು ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ನೀಡಲು ಸಾಧ್ಯವಾಗಿದೆ. ಈ ಯೋಜನೆಯಿಂದ ಹೊರಗಿರುವ ಕಡಿಮೆ ಆದಾಯದ ಜನಸಂಖ್ಯೆಯು ವಾಸಿಸುವ ಪ್ರದೇಶಗಳು ಹೆಚ್ಚಾಗಿದ್ದು, ಅವರಿಗೆ 6 ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.