ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ 15 ದಿನಗಳ ಕಾಲ ಆರೋಗ್ಯ ಅಭಿಯಾನ: ಸಚಿವ ಸುಧಾಕರ್ | JANATA NEWS

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನಾಳೆಯಿಂದ ಮಹಾತ್ಮ ಗಾಂಧಿ ಜಯಂತಿವರೆಗೆ ರಾಜ್ಯದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಸೇರಿದಂತೆ ವಿಶೇಷ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಅಭಿಯಾನಕ್ಕೆ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಾಳೆ ಚಾಲನೆ ದೊರೆಯಲಿದೆ ಎಂದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಇಲ್ಲ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ರಾಜ್ಯದಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಂದಾಗಿ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಆದ್ದರಿಂದ ಮಧುಮೇಹ, ಬಿಪಿ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ಎಷ್ಟು ಎಂಬುದನ್ನು ಪತ್ತೆ ಮಾಡಬೇಕಿದೆ.
ಆರೋಗ್ಯ ಉಪಕೇಂದ್ರಗಳ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ನಿರಂತರವಾಗಿ ಈ ಕಾರ್ಯ ನಡೆಯಬೇಕಿದೆ. ಆಶಾ ಕಾರ್ಯಕರ್ತೆಯರಿಗೆ ಈ ಬಗ್ಗೆ ತಿಳಿಸಿ, ಗುರಿ ನಿಗದಿ ಮಾಡಿ ಜನರನ್ನು ಉಪಕೇಂದ್ರಕ್ಕೆ ಕರೆದುಕೊಂಡು ಬರಲು ಸೂಚಿಸಬೇಕು.
ನವಜಾತ ಶಿಶುವಿನಿಂದ ಆರಂಭವಾಗಿ ವಯೋವೃದ್ಧರವರೆಗೂ ಸರ್ಕಾರ ನೀಡಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಚಿಕಿತ್ಸೆ, ತಪಾಸಣೆ ಸೌಲಭ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು, ಜಿಲ್ಲಾ ಮಟ್ಟ ಅಥವಾ ತಾಲೂಕು ಮಟ್ಟದಲ್ಲಿ ತಪಾಸಣೆ ವ್ಯವಸ್ಥೆ ಮಾಡಿ, ಜನರೇ ಮುಂದೆ ಬಂದು ತಪಾಸಣೆ ಮಾಡಿಸಿಕೊಳ್ಳಲು ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.