ಬಿಎಂಎಸ್ ಟ್ರಸ್ಟ ಅಕ್ರಮ: ಸರಕಾರ ಕೂಡ ಎಲ್ಲ ಗೊತ್ತಿದ್ದರೂ, ಏನೂ ಗೊತ್ತೇ ಇಲ್ಲ ಎನ್ನುವಂತೆ ನಾಟಕ ಆಡುತ್ತಿದೆ | JANATA NEWS
ಬೆಂಗಳೂರು : ಬಿಎಂಎಸ್ ಶಿಕ್ಷಣ ಟ್ರಸ್ಟ್ನಲ್ಲಿ ನಡೆದ ಅಕ್ರಮಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾಗುತ್ತಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕೆಂದು ಎಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ ಮತ್ತು ವಿಧಾನಸಭೆ ಸದಸ್ಯರು ಪಟ್ಟು ಹಿಡಿದಿದ್ದರು.
ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾದ ನಂತರ ಅವರು ವಿಧಾನಸೌಧದಲ್ಲಿನ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾತನಾಡಿ, ಕರ್ನಾಟದಲ್ಲಿ ಮೊತ್ತ ಮೊದಲಿಗೆ ಪರ್ಸಂಟೇಜ್ ವಿಷಯ ಎತ್ತಿದವರೇ ಪ್ರಧಾನಿ ಮೋದಿ ಅವರು. ಕೆಂಪುಕೋಟೆ ಮೇಲೆ ಅಗಸ್ಟ್ 15ರಂದು ಅವರು ಮಾಡಿದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಷಣದಲ್ಲಿಯೂ ಸೇರಿದಂತೆ ಎಲ್ಲ ಕಡೆ ಕಮಿಷನ್ ಮುಕ್ತ ಭಾರತ, ಭ್ರಷ್ಟಾಚಾರ ಮುಕ್ತ ಭಾರತ ಎಂದೆಲ್ಲ ಹೇಳುತ್ತಲೇ ಇದ್ದಾರೆ. ಹಾಗಾದರೆ, ಅವರದ್ದೇ ಬಿಜೆಪಿ ಪಕ್ಷದ ಸರಕಾರ ಇರುವ ಕರ್ನಾಟಕದಲ್ಲಿ ನಡೆಯುತ್ತಿರುವುದು ಪ್ರಧಾನಿಗೆ ಗೊತ್ತಿಲ್ಲವೆ? ಎಂದು ಖಾರವಾಗಿ ಪ್ರಶ್ನಿಸಿದರು.
ಇದು ಸಾವಿರಾರು ಕೋಟಿ ರೂಪಾಯಿ ಸಾರ್ವಜನಿಕ ಟ್ರಸ್ಟ್ ಆಸ್ತಿಯನ್ನು ಹೊಡೆದುಕೊಳ್ಳುವ ಭಾರೀ ಹಗರಣ. ಈಗಾಗಲೆ ಬಹಳಷ್ಟು ಅಕ್ರಮಗಳು ನಡೆದು ಹೋಗಿವೆ. ರಾಜ್ಯ ಬಿಜೆಪಿ ಸರಕಾರಕ್ಕೆ ತನಿಖೆ ನಡೆಸುವ ಧೈರ್ಯವಿಲ್ಲ. ಭ್ರಷ್ಟಾಚಾರ ಹೊರಬಂದರೆ ಈ ಸರಕಾರದ ಬುಡಕ್ಕೇ ಬರುತ್ತದೆ ಎಂಬ ಭಯ ಅವರದ್ದು. ಯಾಕೆಂದರೆ, ಕಾಣದ ಕೈ ಒಂದು ಇಡೀ ಅಕ್ರಮದ ಹಿಂದೆ ಅಡಗಿದೆ. ಈ ಕಾರಣಕ್ಕಾಗಿಯೇ ಸರಕಾರವು ತನಿಖೆಗೆ ಸುತರಾಂ ಒಪ್ಪುತ್ತಿಲ್ಲ ಎಂದು ದೂರಿದರು.
ಅಕ್ರಮ ನಡೆದಿದೆ ಎಂದು ಸರಕಾರಕ್ಕೂ ಗೊತ್ತಿದೆ, ದಾಖಲೆಗಳು ಕಣ್ಣಿಗೆ ಕಟ್ಟಿದಂತೆ ಇವೆ ಎಂದು. ಆದರೆ, ಆ ಕಾಣದ ಕೈಗಳು ಅಕ್ರಮದ ತನಿಖೆ ಆಗದಂತೆ ತಡೆಯುತ್ತವೆ ಹಾಗೂ ತನಿಖೆಯ ಕೈ ಕಟ್ಟಿಹಾಕಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿವೆ. ಇದನ್ನು ಯಾರು ಮಾಡಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಾಗಬೇಕು. ಏನು ಮಾಡಿಲ್ಲವೆಂದರೆ ತನಿಖೆ ನಡೆಸಲು ಮೀನ ಮೇಷ ಏಕೆ? ಭಯ ಏಕೆ? ಎಂದು ಅವರು ಪ್ರಶ್ನೆ ಮಾಡಿದರು.
ಸಾರ್ವಜನಿಕರಿಗೆ ಸೇರಿದ ಟ್ರಸ್ಟ್ ನ್ನು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ಎಲ್ಲ ರೀತಿಯ ಕುಮ್ಮಕ್ಕು ನೀಡಿ ಖಾಸಗಿ ಕುಟುಂಬ ಒಂದಕ್ಕೆ ಪರಭಾರೆ ಮಾಡಿಕೊಳ್ಳಲು ಹೊರಟ್ಟಿದ್ದಾರೆ. ಇದನ್ನು ಸದನದಲ್ಲಿ ನಾನು ದಾಖಲೆಗಳ ಸಮೇತ ಬಿಚ್ಚಿಟ್ಟಿದ್ದೇನೆ. ಆದರೂ, ಸಚಿವರು ಉಢಾಪೆ ಉತ್ತರ ಕೊಟ್ಟು ಏನೂ ಆಗಿಲ್ಲವೆಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಸರಕಾರ ಕೂಡ ಎಲ್ಲ ಗೊತ್ತಿದ್ದರೂ, ಏನೂ ಗೊತ್ತೇ ಇಲ್ಲ ಎನ್ನುವಂತೆ ನಾಟಕ ಆಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇಡೀ ಅಕ್ರಮದ ಬಗ್ಗೆ ಹೇಳುವುದನ್ನೆಲ್ಲ ಸದನದಲ್ಲೇ ಹೇಳಿದ್ದೇನೆ. ದಾಖಲೆಗಳನ್ನು ಬಿಡುಗಡೆ ಮಾಡಿದ್ದೇನೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವ ಪ್ರಶ್ನೆ ಇಲ್ಲ. ಬಿಎಂಎಸ್ ಟ್ರಸ್ಟ್ ಅನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ಅಕ್ರಮವಾಗಿ ತಂದ ತಿದ್ದುಪಡಿಗಳಿಗೆ ಒಪ್ಪಿಗೆ ಕೊಡಲು ನನ್ನ ನೇತೃತ್ವದ ಸರಕಾರ ನಿರಾಕರಿಸಿತ್ತು. ಆದರೆ, ನಂತರ ಬಂದ ಬಿಜೆಪಿ ಸರಕಾರ ಈ ಅಕ್ರಮ ತಿದ್ದುಪಡಿಗಳಿಗೆ ಶರವೇಗದಲ್ಲಿ ಅನುಮೋದನೆ ನೀಡಿತು ಎಂದು ಹೇಳಿದರು.
ಬಿಎಂಎಸ್ ಟ್ರಸ್ಟ್ ಹೇಗೆ ಖಾಸಗಿಯವರ ಪಾಲಾಯಿತು. ಅದಕ್ಕೆ ಕಾರಣ ಯಾರು? ಯಾವ ಸರ್ಕಾರ ಸಹಿ ಹಾಕಿತು ಎಂದೆಲ್ಲ ವಿವರಿಸಿದ್ದರು. ಉನ್ನತ ಶಿಕ್ಷಣ ಸಚಿವರ ರಾಜೀನಾಮೆ ಜತೆಗೆ ಬಿಎಂಸ್ ಟ್ರಸ್ಟ್ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಸರ್ಕಾರದಿಂದ ಬೆಳೆದ ಟ್ರಸ್ಟ್ ಮತ್ತು ಆ ಟ್ರಸ್ಟ್ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕುಮಾರಸ್ವಾಮಿ ಟ್ವೀಟ್ನಲ್ಲಿ ಆಗ್ರಹಿಸಿದ್ದಾರೆ.