ವೈದ್ಯರ ನಿರ್ಲಕ್ಷ್ಯ, ಗರ್ಭಿಣಿ, ಅವಳಿ ಮಕ್ಕಳ ದುರಂತ ಸಾವು! ಜಿಲ್ಲಾಸ್ಪತ್ರೆಯ ವೈದ್ಯೆ , ಸಿಬ್ಬಂದಿ ಅಮಾನತು | JANATA NEWS
ತುಮಕೂರು : ಜಿಲ್ಲಾಸ್ಪತ್ರೆಯ ವೈದ್ಯರ ಎಡವಟ್ಟಿಗೆ ಬಾಣಂತಿ ಹಾಗೂ ಅವಳಿ ಮಕ್ಕಳು ಅಸುನೀಗಿದ ಹೃದಯವಿದ್ರಾವಕ ಘಟನೆ ತುಮಕೂರು ನಗರದ ಭಾರತಿನಗರದ ಅಭಯ ಆಂಜನೇಯನ ಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ.
ಬಾಣಂತಿ ಕಸ್ತೂರಿ(30), ಅವಳಿ ಮಕ್ಕಳು ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ಕಸ್ತೂರಿ 1 ತಿಂಗಳಿಂದ ಓರ್ವ ಪುತ್ರಿ ಜತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಗರ್ಭಿಣಿ ಕಸ್ತೂರಿಗೆ ನಿನ್ನೆ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರು ಆಟೋದಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು.
ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲವೆಂದು ದಾಖಲಿಸಿಕೊಳ್ಳಲು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದು, ನಾವು ಚಿಕಿತ್ಸೆ ನೀಡಲ್ಲ ಎಂದು ವೈದ್ಯರು ಕೂಡ ನಿರಾಕರಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಸಿಬ್ಬಂದಿ ಹೇಳಿದ್ದು, ಬೆಂಗಳೂರಿಗೆ ಹೋಗಲು ಹಣ ಇಲ್ಲದೆ ಕಸ್ತೂರಿ ನೋವಿನಲ್ಲೇ ವಾಪಸ್ ಮನೆಗೆ ಹಿಂತಿರುಗಿದ್ದರು.
ಇಂದು ಮುಂಜಾನೆ ಕಸ್ತೂರಿ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ರಕ್ತಸ್ರಾವವಾಗಿ ಕಸ್ತೂರಿ ಹಾಗೂ ಅವಳಿ ಮಕ್ಕಳೂ ಸಾವನ್ನಪ್ಪಿವೆ.
ಬಾಣಂತಿ ಮತ್ತು ಇಬ್ಬರು ಮಕ್ಕಳ ಸಾವಿಗೆ ತುಮಕೂರು ಜಿಲ್ಲಾಸ್ಪತ್ರೆ ವೈದ್ಯರೇ ಕಾರಣ. ಹೆರಿಗೆ ನೋವೆಂದು ಬಂದಾಗ ದಾಖಲಿಸಿಕೊಂಡಿದ್ದರೆ ತಾಯಿ ಮತ್ತು ಮಕ್ಕಳಿಬ್ಬರು ಬದುಕುತ್ತಿದ್ದರು. ವೈದ್ಯರ ನಿರ್ಲಕ್ಷ್ಯವೇ ಮೂವರ ಸಾವಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪ್ರಕರಣ ಸಂಬಂಧ ಘಟನೆಗೆ ಕಾರಣರಾದ ಆಸ್ಪತ್ರೆ ವೈದ್ಯೆ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ತುಮಕೂರು ಡಿಹೆಚ್ ಒ ಮಂಜುನಾಥ್ ಬಾಣಂತಿ ಹಾಗೂ ಮಗು ಸಾವಿಗೆ ಕಾರಣರಾದ ವೈದ್ಯೆ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸುವಂತೆ ಸೂಚನೆ ನೀಡಿದ್ದರು.