ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ! | JANATA NEWS
ಬೆಂಗಳೂರು : ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ನಾಯಕತು ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎಂದು ವ್ಯಂಗ್ಯವಾಡುತ್ತಿರುವ ಕುರಿತಂತೆ ಇಂದು ಪತ್ರಿಕಾ ಹೇಳಿಕೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, "ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ ಇರುವ ಸಂತ ಶಿಶುನಾಳ ಷರೀಪರ ಪರಂಪರೆ ನಮ್ಮದು" ಎಂದಿದ್ದಾರೆ.
ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಮ್ ಸಮುದಾಯಕ್ಕೆ ನಾನು ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ ಎಂದು ತಿರುಗೇಟು ನೀಡಿದ್ದಾರೆ.
ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ. ಇಂತಹ ಅಪ ಪ್ರಚಾರವಲ್ಲದೆ ಅವರಾದರೂ ಬೇರೆ ಏನು ಮಾಡಲು ಸಾಧ್ಯ? ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳನ ಮಸಿ ಬಳಿದುಕೊಂಡ ಮುಖವನ್ನು ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ? ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿ ಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ. ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಪಕ್ಷ ಇಂತಹ ನೈತಿಕ ಅಧ:ಪತನಕ್ಕೆ ಬಿದ್ದಿರುವುದರ ಬಗ್ಗೆ ನಾವೆಲ್ಲ ಸಾಮೂಹಿಕವಾಗಿ ಸಂತಾಪ ಸೂಚಿಸೋಣ ಎಂದು ವ್ಯಂಗ್ಯವಾಡಿದ್ದಾರೆ.
ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ದತೆಯಿಂದ ನಾನು ಮುಸ್ಲಿಮ್ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ. ಭಾರತೀಯ ಜನತಾ ಪಕ್ಷದ ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ.
ಮುಸ್ಲಿಮ್ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ,ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ದವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ ಎಂದಿದ್ದಾರೆ.