ನಾಮಪತ್ರ ಹಿಂಪಡೆದು ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಶಾಸಕಿ ಶಾರದಾ ಶೆಟ್ಟಿ | JANATA NEWS
ಕಾರವಾರ : ಕಾಂಗ್ರೆಸ್ನಿಂದ ಬಂಡಾಯ ಎದ್ದು ಪಕ್ಷೇತರವಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ತಮ್ಮ ನಾಮಪತ್ರವನ್ನು ಹಿಂಪಡೆಯುವುದರ ಜೊತೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಯನ್ನು ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ ಅವರ ಪುತ್ರ ನಿವೇದಿತ್ ಆಳ್ವಾ ಅವರಿಗೆ ಹೈಕಮಾಂಡ್ ನೀಡಿತ್ತು. ಕುಮಟಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸದ ನಿವೇದಿತ್ ಆಳ್ವಾ ಅವರಿಗೆ ಟಿಕೆಟ್ ನೀಡುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.
ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಅವರು ಬಂಡಾಯವಾಗಿ ಸ್ಪರ್ಧಿಸಲು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಇದು ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಅವರಿಗೆ ತಲೆನೋವಾಗಿ ಪರಿಣಮಿಸಿತ್ತು. ಶಾರದಾ ಶೆಟ್ಟಿ ಅವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿ ಕರೆ ಮಾಡಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಕೆ ಮಾಡಿದ್ದಾರೆ. ಎಂ.ಎಲ್.ಸಿ. ಅಥವಾ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ಕೊಡುವುದಾಗಿಯೂ ಭರವಸೆ ಕೊಟ್ಟಿದ್ದರು ಎನ್ನಲಾಗಿತ್ತು.
ಆದರೆ ಶಾರದಾ ಶೆಟ್ಟಿನಾಮಪತ್ರ ಹಿಂಪಡೆಯುವುದರ ಜೊತೆಗೆ, ಇಂದು ನಾನು ರಾಜಕೀಯವಾಗಿಯೇ ನಿವೃತ್ತಿ ಪಡೆಯಲು ಬಯಸಿದ್ದೇನೆ ಎಂದು ತಿಳಿಸಿದ್ದಾರೆ.
ಪಕ್ಷಕ್ಕಾಗಿ ಹಲವು ವರ್ಷದಿಂದ ನಾನು ಮತ್ತು ನಮ್ಮ ಕುಟುಂಬದವರು ಕೆಲಸ ಮಾಡಿದ್ದೇವೆ. ಆದರೆ, ಪಕ್ಷ ಟಿಕೆಟ್ ನೀಡದಿರುವುದು ನೋವುಂಟು ಮಾಡಿದೆ. ಅಲ್ಲದೇ ರಾಜಕೀಯ ನಿವೃತ್ತಿ ಪಡೆದ ಮೇಲೆ ಯಾರೊಬ್ಬರಿಗೂ ಬೆಂಬಲಿಸುವ ಪ್ರಮೇಯವೇ ಇಲ್ಲ. ನನ್ನ ಬೆಂಬಲಿಗರು ಯಾರನ್ನಾದರೂ ಬೆಂಬಲಿಸಲು ಸ್ವತಂತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ.