ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ! | JANATA NEWS

ಬೆಂಗಳೂರು : ಸಿಎಂ ಸಿದ್ದರಾಮಯ್ಯನವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ ಬಸವರಾಜ ಬೊಮ್ಮಾಯಿ ಅವರು, ಪ್ರಧಾನಮಂತ್ರಿಗಳು ದೇಶದ ಆರ್ಥಿಕತೆ ಹಾಳು ಮಾಡಿದ್ದಾರೆ ಎಂದು ಮುಖ್ಯಮಂತ್ರಿಗಳು ಆರೋಪಿಸಿದ್ದಾರೆ. ಆದರೆ, ಯುಪಿಎ ಸರ್ಕಾರದ ಅವಧಿಯಲ್ಲಿ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಬೆಲೆ ಏರಿಕೆಯಾಗಿ ಡಬಲ್ ಅಂಕಿ ಬೆಲೆ ಏರಿಕೆ, ಸಿಂಗಲ್ ಅಂಕಿ ಆರ್ಥಿಕ ಬೆಳವಣಿಗೆ ಆಗಿತ್ತು. ಅತಿ ಹೆಚ್ಚು ಭ್ರಷ್ಟಾಚಾರ ಮಾಡಿರುವ ಆರೋಪ ಯುಪಿಎ ಸರ್ಕಾರದ ಮೇಲಿತ್ತ, ಎಲ್ಲೆಡೆ ಹಗರಣಗಳು ನಡೆದಿದ್ದವು ಎಂದು ತಿಳಿಸಿದರು.
ಮೋದಿಯವರ ಕಾಲದಲ್ಲಿ ಅತಿ ಹೆಚ್ಚು ವಿದೇಶಿ ವಿನಿಮಯ ನಿಧಿ ಇದೆ. 573 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಫಂಡ್ ಇದೆ. 543 ಬಿಲಿಯನ್ ಡಾಲರ್ ಗೋಲ್ಡ್ ನಿಧಿ ಇದೆ. ಇಡೀ ವಿಶ್ವದಲ್ಲೇ ಅತಿ ಹೆಚ್ಚು ವಿದೇಶಿ ವಿನಿಮಯ ಹೊಂದಿರುವ ದೇಶಗಳ ಸಾಲಿನಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಅತಿ ಹೆಚ್ಚು ಬಂಡವಾಳ ಭಾರತಕ್ಕೆ ಹರಿದು ಬರುತ್ತಿದೆ. ಇದು ಭಾರತದ ಆರ್ಥಿಕ ಶಕ್ತಿಯನ್ನು ತೋರಿಸುತ್ತದೆ" ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
"ಮೋದಿಯವರ ಕಾಲದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ. ಕೋವಿಡ್ ನಿರ್ವಹಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ 130 ಕೋಟಿ ಭಾರತೀಯರಿಗೆ ಮೂರು ಬಾರಿ ಲಸಿಕೆ ಕೊಡಿಸಿ, ಆರ್ಥಿಕ ಸದೃಢತೆಯನ್ನು ಕಾಪಾಡಿರುವುದನ್ನು ಯಾರೂ ಮರೆಯುವಂತಿಲ್ಲ. ಕೋವಿಡ್ ಸಂದರ್ಭದಲ್ಲಿ ಮೋದಿಯವರು ಪ್ರತಿ ತಿಂಗಳು ಹತ್ತು ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಟ್ಟಿದ್ದಾರೆ. ಇದನ್ನು ಸಿದ್ದರಾಮಯ್ಯ ಅಲ್ಲ, ರಾಹುಲ್ ಗಾಂಧಿಯಲ್ಲ. ಇದನ್ನು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.
ಸಿದ್ದರಾಮಯ್ಯನವರು ಪದೇ ಪದೆ ಸುಳ್ಳು ಹೇಳಿದರೆ ಅದು ಸತ್ಯವಾಗಲ್ಲ. ನಮ್ಮ ಸರ್ಕಾರ ಇದ್ದಾಗ ಸರ್ ಪ್ಲಸ್ ಬಜೆಟ್ ಮಂಡನೆ ಮಾಡಿದ್ದೇವು ನೀವು ಬಂದು ಮೂರೇ ತಿಂಗಳಲ್ಲಿ ಕೊರತೆ ಬಜೆಟ್ ಮಾಡಿದ್ದೀರಿ. 58 ಸಾವಿರ ಕೋಟಿ ದಲಿತರ ಹಣವನ್ನು ಗ್ಯಾರೆಂಟಿ ಯೋಜನೆಗಳನ್ನು ಕೊಟ್ಟಿದ್ದೀರಿ. ನೀರಾವರಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ದಿ ಅಭಿವೃದ್ದಿಗೆ ಹಣ ಮೀಸಲಿಟ್ಟಿಲ್ಲ ಎಂದು ನಾನು ಹೇಳುತ್ತಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಗೃಹಜ್ಯೋತಿ ಯಲ್ಲಿ 200 ಯುನಿಟ್ ಕೊಡುತ್ತೇವೆ ಅಂತ ಹೇಳಿ ಸರಾಸರಿ ಅಂತ 43 ಯುನಿಟ್ ನೀಡುವುದಾಗಿ ಹೇಳಿದ್ದೀರಿ. ಇದು ಜನರಿಗೆ ಮಾಡಿದ ಮೋಸ ಅಲ್ಲವಾ? ಗೃಹಲಕ್ಷ್ಮೀ ಇನ್ನೂ ಜಾರಿಗೆ ತರಲಿಕ್ಕೆ ಆಗಿಲ್ಲ. ಶಕ್ತಿ ಯೋಜನೆ ಅಡಿಯಲ್ಲಿ ಕೆಎಸ್ ಆರ್ಟಿಸಿ ಸಿಬ್ಬಂದಿಗೆ ಪೂರ್ಣ ಸಂಬಳ ಕೊಡಲಾಗುತ್ತಿಲ್ಲ. ಪೊಲಿಸರಿಗೆ ಸಂಬಳ ಕೊಡಲಿಕ್ಕೆ ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದೀರಿ. ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನೀವು ರಾಜ್ಯವನ್ನು ಹೇಗೆ ದಿವಾಳಿ ಮಾಡುತ್ತಿದ್ದೀರಾ ಅನ್ನುವುದನ್ನು ಜನತೆ ನೋಡುತ್ತಿದ್ದಾರೆ ಎಂದರು