ನಟ ಉಪೇಂದ್ರ ಹೇಳಿದ್ದೇನು? ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು | JANATA NEWS

ಬೆಂಗಳೂರು : ನಟ, ಉತ್ತಮ ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ ಅವರ ಹೇಳಿಕೆ ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದು ಈ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಉಪೇಂದ್ರ ವಿರುದ್ಧ ಅಟ್ರಾಸಿಟಿ ದೂರು ದಾಖಲಿಸಿದ್ದಾರೆ.
ಉಪೇಂದ್ರ ಫೇಸ್ಬುಕ್ ಲೈವ್ ಬಂದು ಅಭಿಮಾನಿಗಳ ಜೊತೆ ಚರ್ಚೆಯೂ ನಡೆಸುತ್ತಾರೆ. ಹೀಗೆ ಸೋಷಿಯಲ್ ಮೀಡಿಯಾದಲ್ಲಿ ಲೈವ್ಗೆ ಬಂದಾಗ ಆಕ್ಷೇಪಾರ್ಹ ಪದ ಬಳಸಿದ್ದಾರೆ ಅನ್ನೋ ಆರೋಪ ಕಿಚ್ಚು ಹೊತ್ತಿಸಿದೆ.
UPP ಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ 'ಪ್ರಜಾಕೀಯ ದಿನ' ಆಚರಣೆ ಪ್ರಯುಕ್ತ ಫೇಸ್ ಬುಕ್ ನಲ್ಲಿ ಲೈವ್ ಬಂದಿದ್ದ ಉಪೇಂದ್ರ ಮಾತಿನ ನಡುವೆ ಬಳಸಿದ ಗಾದೆ ಮಾತಿಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತಗಳನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ ಎಂದರು. ನಂತರ ಮಾತು ಮುಂದುವರೆಸಿ ಯಾವುದೋ ಮಾತಿಗೆ 'ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ' ಎಂದು ಹೇಳಿದ್ದು ಈ ಮಾತಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.
ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಉಪೇಂದ್ರ ವಿರುದ್ಧ ಪ್ರತಿಭಟನೆ ಶುರುವಾಗಿದ್ದು, ರಾಮನಗರಲ್ಲಿ ನಟ ಉಪೇಂದ್ರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಾರೋಹಳ್ಳಿ ವೃತ್ತದಲ್ಲಿ ದಲಿತ ಪರ ಸಂಘಟನೆಗಳ ಮುಖಂಡರು ಉಪೇಂದ್ರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ನಟ ಉಪೇಂದ್ರ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ.
ಈ ಹೇಳಿಕೆಯನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಎಂಬುವರು ಸಿಕೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಟ ಉಪೇಂದ್ರ ಅವರು ಇದೀಗ ಫೇಸ್ಬುಕ್ನಲ್ಲಿ ಪೋಸ್ಟ್ ಮೂಲಕ ಕ್ಷಮೆ ಕೋರಿದ್ದಾರೆ. 'ಇಂದು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು. . ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋ ವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ.. ಮತ್ತು ಈ ಮಾತಿಗೆ ಕ್ಷಮೆಯಿರಲಿ...' ಎಂದು ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ನಟ ಉಪೇಂದ್ರ ಬರೆದುಕೊಂಡಿದ್ದಾರೆ.