ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ, ಸುಪ್ರೀಂ ಕೋರ್ಟ್ ನಲ್ಲಿ ಮನವಿ - ಸಿಎಂ ಸಿದ್ದರಾಮಯ್ಯ | JANATA NEWS

ಬೆಂಗಳೂರು : ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸುತ್ತೇವೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ತಮಿಳುನಾಡಿಗೆ ಇನ್ನೂ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆಯಲಾಗಿತ್ತು.
ಕಳೆದ 123 ವರ್ಷಗಳಲ್ಲೇ ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವ ಪಕ್ಷ ಸಭೆ ಬಳಿಕ ಹೇಳಿದ್ದಾರೆ.
ರಾಜ್ಯದಲ್ಲಿ ಬರ ಇದೆ. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಕೊರತೆಯಾಗಿದೆ. ಡ್ಯಾಂಗಳಲ್ಲಿ ನೀರಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗುವ ಸಾಧ್ಯತೆ ಇದೆ. ಇಂತಹ ಸಂದಿಗ್ಥ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ(CWRC) ನೀಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ. ವಸ್ತುಸ್ಥಿತಿ ವಿವರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೆ ಪತ್ರ ಬರೆಯುತ್ತೇವೆ, ಎಂದು ಸಿಎಂ ತಿಳಿಸಿದರು.