ಸಿಎಂ ಸಿದ್ದರಾಮಯ್ಯ ವಜಾಕ್ಕೆ ಕುಮಾರಸ್ವಾಮಿ ಆಗ್ರಹ, ಯಾಕೆ ಗೊತ್ತಾ? | JANATA NEWS

ಬೆಂಗಳೂರು : ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ರಾಷ್ಟ್ರಪತಿಗಳ ವಿರುದ್ಧ ಸಿಎಂ ಏಕವಚನ ಪ್ರಯೋಗಿಸಿದ್ದಕ್ಕೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಜೊತೆ ಸರಣಿ ಟ್ವೀಟ್ ಮಾಡಿರೋ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಅಂತ ಆಗ್ರಹಿಸಿದ್ದಾರೆ.
ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ ಎಂದು ಎಚ್ಡಿಕೆ ಕಿಡಿಕಾರಿದ್ದಾರೆ.
ಡೋಂಗಿ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು ಎಂದು ಒತ್ತಾಯಿಸಿದ್ದಾರೆ.
ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯ ಅವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿನ್ನೆಯ ದಿನ ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ, ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.