ಆನ್ಲೈನ್ ಕ್ಲಾಸ್ ನೆಪದಲ್ಲಿ ಗೇಮ್ ಆಡ್ತಿದ್ದ ವಿದ್ಯಾರ್ಥಿ : ಫೋನ್ ಕಿತ್ತುಕೊಂಡಿದ್ದಕ್ಕೆ ಆತ್ಮಹತ್ಯೆ | Janata news
ಗದಗ : ಆನ್ಲೈನ್ ಕ್ಲಾಸ್ ನೆಪದಲ್ಲಿ ಪಬ್ಜಿ ಆಡುತ್ತಿದ್ದ ಯುವಕನಿಗೆ ಗೇಮ್ ಆಡಬೇಡ ಎಂದು ಬೈದು ಮೊಬೈಲ್ ಕಸಿದುಕೊಂಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಹಿರೆಪೇಟೆ ನಿವಾಸಿ ಕಾರ್ತಿಕ್ ಬುಲಿ (17) ಎಂಬ ಯುವಕ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಆನ್ಲೈನ್ ಕ್ಲಾಸ್ ನೆಪದಲ್ಲಿ ಯಾವಾಗಲೂ ಗೇಮ್ ಆಡುತ್ತಿದ್ದ.
ಇದನ್ನು ಗಮನಿಸಿದ ಪೋಷಕರು ಗೇಮ್ ಆಡ್ತಿಯಾ, ಓದು ಅಂತ ಬೈದು ಮೊಬೈಲ್ ಕಸಿದುಕೊಂಡಿದ್ದಾರೆ. ಸಾಕಷ್ಟು ಬಾರಿ ಕೇಳಿದರೂ ಪೋಷಕರು ಆತನಿಗೆ ಮೊಬೈಲ್ ಕೊಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಇದನ್ನು ನೋಡಿದ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಯೋಜನವಾಗಿಲ್ಲ.
ಗಜೇಂದ್ರಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇರುವ ಒಬ್ಬ ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.