ರಮೇಶ್ ಜಾರಕಿಹೊಳಿಗೆ ಕರೊನಾ ಪಾಸಿಟಿವ್ ಎಂದ ಸಚಿವ ಭೈರತಿ ಬಸವರಾಜು | ಜನತಾ ನ್ಯೂಸ್
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕರೊನಾ ಪಾಸಿಟಿವ್ ಬಂದಿದೆ ಎಂದು ಸಚಿವ ಭೈರತಿ ಬಸವರಾಜು ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೈರತಿ ಬಸವರಾಜು, ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲೇ ಇದ್ದಾರೆ. ಉಪಚುನಾವಣೆ ಪ್ರಚಾರಕ್ಕೆ ಕರೆಯುವ ಸಲುವಾಗಿ ನಾನು ರಮೇಶ್ ಜಾರಕಿಹೊಳಿ ಅವರಿಗೆ ಕರೆ ಮಾಡಿದ್ದೆ. ಆದರೆ, ಅವರು ಪ್ರಚಾರಕ್ಕೆ ಬರುವುದು ಅನುಮಾನ. ನಾನು ಫೋನ್ ಮಾಡಿದ್ದಾಗ ರಮೇಶ್ ಜಾರಕಿಹೊಳಿ ಅವರೇ ತಮಗೆ ಕೊರೊನಾ ಇರುವುದಾಗಿ ಮಾಹಿತಿ ನೀಡಿದ್ದಾರೆಂದು ಭೈರತಿ ಬಸವರಾಜು ತಿಳಿಸಿದ್ದಾರೆ.
ಸದ್ಯ ಎಸ್ಐಟಿ ವಿಚಾರಣೆಗೂ ಅನಾರೋಗ್ಯ ನೆಪವೊಡ್ಡಿ ತಪ್ಪಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ರಮೇಶ್ ಜಾರಕಿಹೊಳಿ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು.
ಹೀಗಾಗಿ ಇಂದು ವಿಚಾರಣೆಗೆ ರಮೇಶ್ ಜಾರಕಿಹೊಳಿ ಹಾಜರಾಗುವುದು ಬಹುತೇಕ ಅನುಮಾನವಾಗಿದ್ದು, ಕಳೆದ ಎಂಟು ದಿನಗಳಿಂದ ಸಂಪರ್ಕಕ್ಕೆ ಸಿಗದ ಅವರು ತಮ್ಮ ವಕೀಲರ ಜೊತೆ ಈ ಬಗ್ಗೆ ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ.
ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ. ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.