ಸರ್ವ ಪಕ್ಷಗಳ ಸಭೆ; ಕರ್ನಾಟಕದಲ್ಲಿ ಲಾಕ್ ಡೌನ್ ಅನಿವಾರ್ಯ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದಲೇ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಸೇರಿದಂತೆ ಅನೇಕ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಲ್ಲಿ ಕೋವಿಡ್ ಪರಿಸ್ಥಿತಿ; ಲಾಕ್ ಡೌನ್ ಜಾರಿಗೆ ವಿರೋಧ
ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಎರಡನೇ ಅಲೆ ವೇಗವಾಗಿ ಹಬ್ಬುತ್ತಿದೆ. ಇಂತಹ ಸಂದರ್ಭದಲ್ಲಿ ನೀವು ಎಲ್ಲರ ಅಭಿಪ್ರಾಯ ಕೇಳಲು ಮುಂದಾಗಿರುವುದು ಸ್ವಾಗತಾರ್ಹ ಎಂದರು.
ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಕೊರೊನಾ ಸೋಂಕಿನ ಎರಡನೆಯ ಅಲೆ ವಿಪರೀತವಾಗಿದೆ. ಅದಕ್ಕೆ ಕಡಿವಾಣ ಹಾಕಬೇಕೆಂದರೆ ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಹಾಗಾಗಿ ಲಾಕ್ಡೌನ್ ಮಾಡಿ, ಲಾಕ್ಡೌನ್ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಪಾಲರ ಮೇಲೆ ಗೌರವವಿಟ್ಟು ನಾವು ಸಭೆಗೆ ಬಂದಿದ್ದೇವೆ. ಸಭೆ ಕರೆದಿರುವುದೇ ಅಸಂವಿಧಾನಿಕ. ರಾಜ್ಯಪಾಲರು ಸಭೆ ಕರೆಯುವ ಮೂಲಕ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ ಎಂದರು.