ಬಿಪಿಎಲ್ ಕಾರ್ಡ್ ಹೊಂದಿರುವ ಹಿರೇಕೆರೂರು, ರಟ್ಟಿಹಳ್ಳಿ ಕ್ಷೇತ್ರದ ಬಡವರಿಗೆ ಉಚಿತ ಕೊರೊನಾ ಚಿಕಿತ್ಸೆ: ಬಿ.ಸಿ.ಪಾಟೀಲ್ | ಜನತಾ ನ್ಯೂಸ್
ಹಾವೇರಿ : ತಮ್ಮ ಕ್ಷೇತ್ರದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಬಡವರು ಕೋವಿಡ್-19 ಸೋಂಕಿತರಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದಾದರೆ ಅಂತವರಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಅವರು ಘೋಷಿಸಿದ್ದಾರೆ.
ಈ ಸಂಬಂಧ ತಮ್ಮ ಹಿರೇಕೆರೂರಿನ ನಿವಾಸದಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಹಿರೇಕೆರೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿ ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಘೋಷಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕು ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿದವರು ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯಲು ಮುಂದಾದರೆ ಅಂತವರು ಚಿಕಿತ್ಸೆ ಪಡೆದ ಬಳಿಕ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್ ಹಾಗೂ ಆಸ್ಪತ್ರೆ ಬಿಲ್ ನೀಡಿದರೆ ವೆಚ್ಚ ಭರಿಸುತ್ತೇನೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಚಿಕಿತ್ಸೆ ಪಡೆದ ವಿವರ, ಮಾಹಿತಿ ಮತ್ತು ಅಗತ್ಯ ದಾಖಲೆಗಳು ಹಾಗೂ ಆಸ್ಪತ್ರೆಯ ಬಿಲ್ಗಳನ್ನು ಸಲ್ಲಿಸಲು ಸಚಿವರ ಆಪ್ತ ಸಹಾಯಕರಾದ ಮನೋಜ್ ಹಾರನಹಳ್ಳಿ ಹಾಗೂ ನಾಗರಾಜ್ ಬಣಕಾರ್ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.
ಮಹಾಮಾರಿ ಕೊರೊನಾ ವಿಶ್ವವ್ಯಾಪಿಯಾಗಿ ಹೆಚ್ಚು ಸೋಂಕು ಹರಡುತ್ತಿದೆ. ಸರ್ಕಾರ ಕೂಡ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಜನರು ಸಹ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಬೇಕು. ಕೊರೊನಾ ಅಂದರೆ ಭಯಬೇಡ, ಅಗತ್ಯವಾದ ಸುರಕ್ಷತಾ ಕ್ರಮಗಳನ್ನು ನಾವು ಪಾಲನೆ ಮಾಡೋಣ ಎಂದು ಎಚ್ಚರಿಕೆ ನೀಡಿದ್ದಾರೆ.