ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೂವರು ಮಾತ್ರ ಸಾವನ್ನಪ್ಪಿದ್ದಾರೆ- ಸಚಿವ ಸುಧಾಕರ್ ಸ್ಪಷ್ಟನೆ | ಜನತಾ ನ್ಯೂಸ್
ಚಾಮರಾಜನಗರ : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ ರಾತ್ರಿ 12 ಗಂಟೆಯಿಂದ 3 ಗಂಟೆಯವರೆಗೆ ಸಂಭವಿಸಿದಂತ ಮೂರು ಕೊರೋನಾ ಸೋಂಕಿತರ ಸಾವು ಮಾತ್ರ ಆಕ್ಸಿಜನ್ ಸಿಗದೇ ಸಾವನ್ನಪ್ಪಿರೋದು. ಈ ಬಗ್ಗೆ ಸರ್ಕಾರ ತನಿಖೆ ನಡೆಸುತ್ತಿದೆ. ತನಿಖೆಯ ನಂತ್ರ ಸತ್ಯಾಸತ್ಯತೆ ಹೊರಬರಲಿದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಇಂದು ಸಂಭವಿಸಿದ ಘಟನೆ ಬಹಳ ದುಃಖಕರವಾದುದು. ಮೃತರ ಕುಟುಂಬಗಳ ಜೊತೆ ರಾಜ್ಯ ಸರ್ಕಾರ ಇದೆ. ಈಗಾಗಲೇ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ. ನ್ಯಾಯಸಮ್ಮತ ತನಿಖೆ ಆಗಲಿ.
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 123 ಸೋಂಕಿತರು ದಾಖಲಾಗಿದ್ದಾರೆ. ವೆಂಟಿಲೇಟರ್ನಲ್ಲಿ 14 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಬೆಳಗ್ಗೆ 7 ಗಂಟೆಯಿಂದ ಮಧ್ಯರಾತ್ರಿವರೆಗೆ 14 ಜನ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಕೊವಿಡ್ ಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.
ಮಧ್ಯರಾತ್ರಿ 12ರಿಂದ 3 ಗಂಟೆವರೆಗೆ ಮೂವರು ಸಾವನ್ನಪ್ಪಿದ್ದಾರೆ. ಮುಂಜಾನೆ 3 ಗಂಟೆಯಿಂದ 7 ಗಂಟೆಯವರೆಗೆ 7 ಜನ ಸಾವುನ್ನಪ್ಪಿದ್ದು, 24 ಗಂಟೆಯಲ್ಲಿ 23 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 24 ಸೋಂಕಿತರು ಮೃತಪಟ್ಟಿದ್ದಾರೆ.
ನಮಗೆ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದರು.
ಒಂದು ಸಾವಿಗೂ ಬೆಲೆ ಇದೆ. ಒಂದು ಜೀವವನ್ನು ಸಾಯೋದಕ್ಕೆ ಬಿಡದಂತೆ ಕೆಲಸ ಮಾಡೋ ಕಾರ್ಯವನ್ನು ಮಾಡುತ್ತಿದ್ದೇವೆ. ಈ ದುರ್ಘಟನೆಯಿಂದ ವೈದ್ಯನಾಗಿ ನನಗೂ ನೋವಾಗಿದೆ. ಮುಂದೆ ರಾಜ್ಯದಲ್ಲಿ ಎಲ್ಲಿಯೂ ಇಂತಹ ದುರ್ಘಟನೆ ಸಂಭವಿಸೋದು ಬೇಡ ಎಂದರು.
ರಾಜ್ಯಕ್ಕೆ 850 ಟನ್ ಆಮ್ಲಜನಕವನ್ನು ಕೇಂದ್ರ ಸರ್ಕಾರದಿಂದ ಸರಬರಾಜು ಆಗ್ತಾ ಇದೆ. ರಾಜ್ಯದ ಪ್ರತಿ ಜಿಲ್ಲೆ, ತಾಲೂಕು, ಕ್ಲಿನಿಕ್ ಗಳಿಗೂ ಸಹ ಸರಬರಾಜು ಮಾಡುವಂತ ಕೆಲಸವನ್ನು ಮಾಡಲಾಗುತ್ತಿದೆ. ಅದರ ನಡುವೆಯೂ ಈ ರೀತಿಯ ದುರ್ಘಟನೆ ನಡೆದಿರೋದು ನೋವಿನ ಸಂಗತಿಯಾಗಿದೆ. ಈ ಬಗ್ಗೆ ಸರ್ಕಾರದಿಂದ ತನಿಖೆಗಾಗಿ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಆ ಬಗ್ಗೆ ತನಿಖೆ ನಡೆಸಿ, ವರದಿಯನ್ನು ನೀಡದ ನಂತ್ರವೇ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎಂದರು.