ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂಸ್
ಬೆಂಗಳೂರು : ಲಸಿಕೆ ವಿತರಣೆಯಲ್ಲಿ ಕರ್ನಾಟಕ ಮತ್ತು ಗುಜರಾತ್ ರಾಜ್ಯಕ್ಕೆ ತೋರಿದ ತಾರತಮ್ಯದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಕಾರದ ವಿರುದ್ದ ಬೇಸರ ವ್ಯಕ್ತ ಪಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ, 25 ಸಂಸದರನ್ನು ಇಲ್ಲಿಂದ ಕಳುಹಿಸಿದ್ದರೂ, ಕರ್ನಾಟಕದ ಬಗ್ಗೆ ಕೇಂದ್ರ ಸರಕಾರ ತೋರುತ್ತಿರುವ ಮಲತಾಯಿ ಧೋರಣೆ ಮಾನವೀಯತೆಗೆ ವಿರುದ್ದ ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, 18-44 ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನ ಮೇ 1ರಿಂದ ಆರಂಭವಾಗಿದೆ. ದೇಶದಲ್ಲಿ ಮಂಗಳವಾರದ ಹೊತ್ತಿಗೆ 6 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ ಗುಜರಾತ್ನಲ್ಲಿ 1,61,000 ಜನರಿಗೆ ಲಸಿಕೆ ಹಾಕಲಾಗಿದ್ದರೆ, ಕರ್ನಾಟಕದಲ್ಲಿ ಕೇವಲ 3475 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಇದು ಕೇಂದ್ರದ ತಾರತಮ್ಯವೋ, ರಾಜ್ಯದ ವೈಫಲ್ಯವೋ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಆಗುತ್ತಿರುವ ಈ ತಾರತಮ್ಯ ಮನುಷ್ಯತ್ವ ವಿರೋಧಿ. ಕನ್ನಡಿಗರಿಗಾಗಿ ಸೊಲ್ಲೆತ್ತದ ರಾಜ್ಯ ಸರ್ಕಾರದ ಪರಮ ವೈಫಲ್ಯ
ರಾಜ್ಯಕ್ಕೆ ಕೇಂದ್ರ ಸರ್ಕಾರ ಲಸಿಕೆ ನೀಡುತ್ತಿಲ್ಲವೇ? ರಾಜ್ಯಕ್ಕೆ ಏನು ಬೇಕೋ ಅದನ್ನು ಕೇಳಿ ಪಡೆಯಲು ರಾಜ್ಯ ಸರ್ಕಾರಕ್ಕೆ ಶಕ್ತಿ ಇಲ್ಲವೇ? ಇತರ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದನ್ನು ಪ್ರಶ್ನಿಸಲು ನಮ್ಮವರಿಗೆ ಬಾಯಿಲ್ಲವೇ? ಇದೆಲ್ಲ ಗಮನಿಸುತ್ತಿದ್ದರೆ, ಕನ್ನಡರಿಗರನ್ನು ಈ ಸರ್ಕಾರಗಳು ಹಣೆಬರಹಕ್ಕೆ ಬಿಟ್ಟಂತೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.