ಕೊವಿಡ್ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್ಯೂಸ್
ನವದೆಹಲಿ: : ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯ ಚುನಾವಣೆ ಮತ್ತೆ ಮುಂದೂಡಿಕೆಯಾಗಿದೆ. ಕಳೆದ ವರ್ಷ ಆಗಸ್ಟ್ ನಿಂದಲೂ ಚುನಾವಣೆ ಮುಂದೂಡಿಕೆಯಾಗುತ್ತಾ ಬಂದಿದ್ದು, ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೆಲಸ ನಡೆಸಲಿದೆ.
ಇಂದು ಕಾಂಗ್ರೆಸ್ನ ಕಾರ್ಯಸಮಿತಿ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಜೂನ್ 23ಕ್ಕೆ ಚುನಾವಣೆ ನಡೆಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದ್ರೆ ಕಾಂಗ್ರೆಸ್ ನ ಎಲ್ಲ ನಾಯಕರು ಕೊರೊನಾ ಸಂಕಷ್ಟದಲ್ಲಿ ಚುನಾವಣೆ ನಡೆಸೋದು ಸೂಕ್ತವಲ್ಲ ಎಂದು ನಿರ್ಧರಿಸಿದ್ದಾರೆ. ಕಾರ್ಯಸಮಿತಿಯಲ್ಲಿ ಜೂನ್ 23ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನ ಮುಂದೂಡುವ ನಿರ್ಧಾರ ತೆಗೆದುಕೊಂಡಿದೆ.
ಇಂದಿನ ಸಭೆಯಲ್ಲಿ, ಪಕ್ಷದ ಹೊಸ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯ ಕುರಿತು ಚರ್ಚೆ ನಡೆಸಲಾಯಿತು. ಆದರೆ ಹಿರಿಯ ನಾಯಕರಾದ ಅಶೋಕ್ ಗೆಹ್ಲೋಟ್, ಜಿಎನ್ ಆಜಾದ್, ಆನಂದ್ ಶರ್ಮಾ ಅವರು ಕೊವಿಡ್ರ ಕಾರಣದಿಂದಾಗಿ ಈ ಸಮಯದಲ್ಲಿ ಚುನಾವಣೆಯ ಅಗತ್ಯವಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಹೈಕಮಾಂಡ್ ಕೋವಿಡ್ -19 ಪರಿಸ್ಥಿತಿ ಮತ್ತು ಐದು ರಾಜ್ಯಗಳಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಕುರಿತು ಚರ್ಚಿಸಿತು.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪುನರಾವರ್ತಿತ ಹಿನ್ನಡೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವನ್ನು ಒಪ್ಪಿಕೊಂಡರು ಮತ್ತು ಕಾಂಗ್ರೆಸ್ ಪಕ್ಷವನ್ನು ಕ್ರಮಬದ್ಧಗೊಳಿಸುವ ಅವಶ್ಯಕತೆಯಿದೆ ಎಂದು ಹೇಳಿದರು.
ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾದ ಪ್ರತಿಯೊಂದು ಅಂಶಗಳನ್ನೂ ಗಮನಿಸಲು ಒಂದು ಸಣ್ಣ ಗುಂಪನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.