ರಾಜ್ಯದಲ್ಲಿ 97 ಮಂದಿಗೆ ಬ್ಲ್ಯಾಕ್ ಫಂಗಸ್, ನಾಲ್ವರು ಬಲಿ: ಆರೋಗ್ಯ ಸಚಿವ ಸುಧಾಕರ್ ಮಾಹಿತಿ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ನಿಂದಾಗಿ ಈವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ. ಇಂತಹ ರೋಗವು 97 ಜನರಲ್ಲಿ ಕಾಣಿಸಿಕೊಂಡಿರೋದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಜ್ಯದಲ್ಲಿ ಕೊರೋನಾ ಸೋಂಕಿನ ಮಧ್ಯೆ ಬ್ಲ್ಯಾಕ್ ಫಂಗಸ್ ಆತಂಕ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಸಂಬಂಧ ಆರೋಗ್ಯ ಸಚಿವ ಕೆ.ಸುಧಾಕರ್ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಿತು. ನೇತ್ರ ತಜ್ಞ ಭುಜಂಗಶೆಟ್ಡಿ, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ಬ್ಲ್ಯಾಕ್ ಫಂಗಸ್ ಬಗ್ಗೆ ಚರ್ಚಿಸಿದರು.
ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಕೇಂದ್ರ ಸರ್ಕಾರ ಕಪ್ಪು ಶಿಲೀಂದ್ರಿ ಕಾಯಿಲೆಯನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ತಿಳಿಸಿದೆ. ಇದರ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಬ್ಲ್ಯಾಕ್ ಫಂಗಸ್ ಕೋವಿಡ್ನಷ್ಟು ಭೀಕರವಲ್ಲ. ಕೇಂದ್ರ ಸರ್ಕಾರದಿಂದ ಈ ಕಾಯಿಲೆ ಬಗ್ಗೆ ಕೆಲವು ಮಾರ್ಗಸೂಚಿ ನೀಡಲಾಗಿದೆ. ಕೆಲವು ರಾಜ್ಯದಲ್ಲಿ ಪ್ರೋಟೋಕಾಲ್ ಜಾರಿಯಲ್ಲಿದೆ. ಹೀಗಾಗಿ ಜನ ಆತಂಕ ಪಡುವ ಅಗತ್ಯವಿಲ್ಲ ಎಂದರು.
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ರೋಗದಿಂದಾಗಿ ಬೆಂಗಳೂರಿನಲ್ಲಿ ಮೂವರು, ಕೋಲಾರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಾವನ್ನಪ್ಪಿದಂತ ಮೂವರು ಕೋವಿಡ್ ಸ್ಟೇಜ್ ಇದ್ದಾಗಲೇ ತೀರಿಕೊಂಡಿದ್ದರು. ಇಂತವರಿಗೆ ಬ್ಲ್ಯಾಕ್ ಫಂಗಸ್ ಕೂಡ ಪತ್ತೆಯಾಗಿತ್ತು ಎಂದು ತಿಳಿಸಿದ್ದಾರೆ.
ಕ್ಯಾನ್ಸರ್ ರೋಗಿಗಳು, ಹೆಚ್ಐವಿ ಇರುವವರು, ಅಂಗಾಂಗ ಕಸಿ ಮಾಡಿಸಿಕೊಂಡವರಿಗೆ ಈ ಫಂಗಸ್ ತಗುಲುವ ಸಾಧ್ಯತೆಯಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಮಧುಮೇಹಿಗಳು, ಅಂಗಾಂಗ ಕಸಿ ಮಾಡಿಸಿಕೊಂಡವರು, ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿರುವವರು, ಹೆಚ್ಐವಿ ಸೇರಿದಂತೆ ಇತರೆ ಕಾಯಿಲೆ ಇದ್ದವರು ಎಚ್ಚರದಿಂದ ಇರಬೇಕು.
ಕೊರೊನಾದಿಂದ ಗುಣಮುಖರಾದ ಬಳಿಕ ಕಿವಿ, ಮೂಗು, ಕಣ್ಣು ತಪಾಸಣೆ ಮಾಡಿಸಿಕೊಳ್ಳಬೇಕು. ತಪಾಸಣೆ ಮಾಡಿಸಿಕೊಂಡು ಡಿಸ್ಚಾರ್ಜ್ ಆಗಬೇಕು. ಇದನ್ನು ಯಾರೂ ಮುಚ್ಚಿಡಬಾರದು. ಮುಚ್ಚಿಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಇಂದು ನೋಟಿಸ್ ಸಹ ಹೊರಡಿಸುತ್ತೇವೆ ಎಂದು ತಿಳಿಸಿದರು.