ಕದ್ದು ಮುಚ್ಚಿ ಮಾಡುವುದು ಬಿಜೆಪಿ "ಸಂಸ್ಕೃತಿ": ಎಚ್.ಡಿ.ಕುಮಾರಸ್ವಾಮಿ ಟೀಕೆ | ಜನತಾ ನ್ಯೂಸ್
ಬೆಂಗಳೂರು : ಜಿಂದಾಲ್ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? ಎಂದು ಇತ್ತೀಚೆಗೆ ಟ್ವೀಟ್ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದರು. ಅದಕ್ಕೆ ನಿನ್ನೆ ನಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸಂಪುಟ ಸಭೆಯಲ್ಲಿ ಸಮಾಧಾನಕರ ಉತ್ತರ ಸಿಕ್ಕಿದೆ ಎಂಬ ರೀತಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಮತ್ತೊಮ್ಮೆ ಟ್ವೀಟ್ ಮಾಡಿದ್ದಾರೆ.
ಜಿಂದಾಲ್ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪ ಸಲ್ಲದ ಆರೋಪ ಮಾಡಿದ್ದರು. ಆದರೆ, ಈಗ ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದು ಟೀಕಿಸಿದ್ದಾರೆ.
ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ "ಸಂಸ್ಕೃತಿ". ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ.
— H D Kumaraswamy (@hd_kumaraswamy) May 28, 2021
1/3