ಪೆಟ್ರೋಲ್ ಬೆಲೆ ಏರಿಕೆ ಮೂಲಕ ಬಿಜೆಪಿಯ ಲೂಟಿ ಖಂಡಿಸಿ ರಾಜ್ಯಾದ್ಯಂತ "100 ನಾಟೌಟ್" ಆಂದೋಲನ | ಜನತಾ ನ್ಯೂಸ್
ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮೂಲಕ ಜನರ ಜೇಬು ಲೂಟಿ ಮಾಡುತ್ತಿದೆ. ಇದನ್ನು ಖಂಡಿಸಿ ರಾಜ್ಯದಲ್ಲಿ ಐದು ದಿನಗಳ ಕಾಲ 5 ಸಾವಿರ ಪೆಟ್ರೋಲ್ ಬಂಕ್ ಗಳಲ್ಲಿ "100 ನಾಟೌಟ್" ಅಭಿಯಾನ ಆರಂಭಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದ ಇತಿಹಾಸ ಪುಟಕ್ಕೆ ನಾವೆಲ್ಲ ಸಾಕ್ಷಿಯಾಗುತ್ತಿದ್ದೇವೆ. ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ, ದಾಖಲೆಗಳನ್ನು ಮುರಿಯುತ್ತಿದೆ. ಪೆಟ್ರೋಲ್ ಬೆಲೆ ₹100 ಗಡಿ ದಾಟಿದೆ. ಇದನ್ನು ಖಂಡಿಸಿ ಆಂದೋಲನ ಹಮ್ಮಿಕೊಂಡಿದ್ದೇವೆ. ಈ ಪ್ರತಿಭಟನೆ ಇದೇ ತಿಂಗಳು 11ರಿಂದ 15 ರವರೆಗೂ ಐದು ದಿನಗಳ ಕಾಲ ನಡೆಯಲಿದೆ ಎಂದರು.
ಒಂದು ತಿಂಗಳಲ್ಲಿಯೇ 16 ಬಾರಿ ಪೆಟ್ರೋಲ್ ಬೆಲೆ ಏರಿಸಲಾಗಿದೆ. ನೆರೆಯ ಬಾಂಗ್ಲಾ, ಪಾಕ್, ಶ್ರೀಲಂಕಾದಲ್ಲಿಯೂ ಇಷ್ಟು ದರ ಇಲ್ಲ. ಅವರಿಗಿಂತ ನಮ್ಮ ಜಿಡಿಪಿಯೂ ಕೆಳಗಿಳಿದಿರುವುದು ದುರ್ದೈವದ ಸಂಗತಿ. ಅಭಿವೃದ್ಧಿ ಶೀಲ ಭಾರತದಿಂದ ನಾವು ಈ ಮಟ್ಟಕ್ಕೆ ಬಂದಿದ್ದೇವೆ. ಪೆಟ್ರೋಲ್ ಬೆಲೆಯಿಂದ ಇತರೆ ವಸ್ತುಗಳ ದರಗಳು ಕೂಡ ಏರಿಕೆಯಾಗಲಿದ್ದು, ಜನರ ಬದುಕು ದುಸ್ತರವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದರು.
ಜೂ.11 ರಂದು ಎಲ್ಲ ಜಿಲ್ಲಾ ಕೇಂದ್ರ, ಜೂ.12ರಂದು ತಾಲೂಕು ಕೇಂದ್ರಗಲ್ಲಿ, 13 ರಂದು ಎಲ್ಲ ಜಿಲ್ಲಾ ಪಂಚಾಯತ್ ಹಾಗೂ ಹೋಬಳಿ ಕೇಂದ್ರಗಳಲ್ಲಿ, 14 ರಂದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆಟ್ರೋಲ್ ಬಂಕ್ ಗಳಲ್ಲಿ, ಜೂ.15 ರಂದು ಪ್ರಮುಖ ಪೆಟ್ರೋಲ್ ಬಂಕ್ ಗಳಲ್ಲಿ ಪ್ರತಿಭಟನೆ ಮಾಡಲಾಗುವುದು.
ನಮ್ಮ ಎಲ್ಲ ಘಟಕಗಳಾದ ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎಂಎಸ್ಯುಐ, ರೈತ ಘಟಕ, ಹಿಂದುಳಿದ, ಅಲ್ಪಸಂಖ್ಯಾತ ಘಟಕ, ಬ್ಲಾಕ್, ಜಿಲ್ಲಾ ಕಾಂಗ್ರೆಸ್ ಸದಸ್ಯರು ಈ ಐದು ಸಾವಿರ ಪೆಟ್ರೋಲ್ ಬಂಕ್ ಗಳಲ್ಲಿ ಬೆಳಗ್ಗೆ 11 ರಿಂದ 12 ರವರೆಗೂ ಒಂದು ಗಂಟೆಗಳ ಕಾಲ ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿಸಿದರು.
ನಾನು, ನಮ್ಮ ಶಾಸಕರು, ಮಾಜಿ ಶಾಸಕರು, ಪಂಚಾಯತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಕೋವಿಡ್ ನಿಯಮಾವಳಿ ಪಾಲಿಸಿ ಈ ಪ್ರತಿಭಟನೆ ಮಾಡಬೇಕು. ಪೆಟ್ರೋಲ್ ಮೂಲಕ ಸರ್ಕಾರ ಪಿಕ್ ಪಾಕೆಟ್ ಮಾಡುತ್ತಿರುವುದನ್ನು ಖಂಡಿಸಿ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.