ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್ ಆರೋಪ, ನಟ ಚೇತನ್ ಬಂಧನಕ್ಕೆ ಶಿವರಾಮ್ ಹೆಬ್ಬಾರ್ ಆಗ್ರಹ | ಜನತಾ ನ್ಯೂಸ್
ಬೆಂಗಳೂರು : ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ನಟ ಚೇತನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೇತನ್ ಅವರನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಶಿವರಾಮ್ ಹೆಬ್ಬಾರ್ ಮನವಿ ಮಾಡಿಕೊಂಡಿದ್ದಾರೆ.
ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿದೆ. ಮೊದಲಿಗೆ ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಶಿವರಾಂ ಹೆಬ್ಬಾರ್ ಟ್ವೀಟ್ ಮಾಡಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು.
ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಅಂತಾ ಸಚಿವ ಶಿವರಾಂ ಹೆಬ್ಬಾರ್ ಟ್ವೀಟ್ ಮಾಡಿದ್ದಾರೆ.
ಜೂ.6ರಂದು ಚೇತನ್ ಮಾಡಿರುವ ಒಂದು ಟ್ವೀಟ್ ಮತ್ತು ಫೇಸ್ಬುಕ್ ಪೋಸ್ಟ್- "ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಬರೆದುಕೊಂಡಿದ್ದರು.