ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜೂನ್ 30ರಿಂದ ಆರಂಭ: ಸುರೇಶ್ ಕುಮಾರ್ | ಜನತಾ ನ್ಯೂಸ್
ಬೆಂಗಳೂರು : ಜೂನ್ 30ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ ಮಾಡುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ವರ್ಗಾವಣೆ ಪ್ರಕ್ರಿಯೆ ವಿವರಗಳನ್ನು ಪ್ರಕಟಿಸಿದ ಅವರು, ಅಧಿಕೃತ ವೇಳಾಪಟ್ಟಿ ಹಾಗೂ ಅಧಿಸೂಚನೆ ಜೂ. 30ಕ್ಕೆ ಪ್ರಕಟಗೊಳ್ಳಲಿದ್ದು, ಅಂದಿನಿಂದಲೇ ವರ್ಗಾವಣಾ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ ಎಂದರು.
2019-20ನೇ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆಗೆ ಒಳಗಾಗಿದ್ದ ಶಿಕ್ಷಕರಿಗೆ ನ್ಯಾಯ ದೊರಕಿಸುವುದು ನಮ್ಮ ಜವಾಬ್ದಾರಿಯಾಗಿತ್ತು. ವಿಧಾನ ಮಂಡಲದಲ್ಲಿ ಉಭಯ ಸದನಗಳಲ್ಲಿ ಅನುಮೋದನೆ ಪಡೆದು ಕಾಯ್ದೆ ಅಧಿಸೂಚಿಸಿದ ಸಂದರ್ಭದಲ್ಲಿ ಕೆಲವು ಶಿಕ್ಷಕರು ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತಂದಿದ್ದರು. ಅದಕ್ಕಾಗಿ ಸಚಿವ ಸಂಪುಟದ ಅನುಮೋದನೆ ಪಡೆದು ರಾಜ್ಯಪಾಲರು ಒಪ್ಪಿದ ಬಳಿಕ ಸುಗ್ರೀವಾಜ್ಞೆ ಹೊರತಂದಿದ್ದೇವೆ. ಪೂರಕ ನಿಯಮಗಳನ್ನು ಸಹ ಅಂತಿಮಗೊಳಿಸಿ, ವರ್ಗಾವಣಾ ಪ್ರಕ್ರಿಯೆಗೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಈ ಬಾರಿ ವರ್ಗಾವಣೆಗೆ 75 ಸಾವಿರ ಅರ್ಜಿ ಸಲ್ಲಿಕೆಯಾಗಿದೆ. ಇದನ್ನು ಹೊರತುಪಡಿಸಿ ವರ್ಗಾವಣೆ ಬಯಿಸಿದರೆ, 2ನೇ ಹಂತದಲ್ಲಿ ವರ್ಗಾವಣೆಗೆ ಅವಕಾಶ ನೀಡಲಾಗುವುದು. ವರ್ಗಾವಣೆಗೆ ಯಾರೂ ಕೌನ್ಸೆಲಿಂಗ್ ಜಾಗಕ್ಕೆ ಹೋಗಬೇಕಿಲ್ಲ ಎಂದು ಭರವಸೆ ನೀಡಿದ್ದಾರೆ.
ವರ್ಗಾವಣೆಯಲ್ಲಿ ವಲಯ, ಹೆಚ್ಚುವರಿ ವರ್ಗಾವಣೆ ಇರುವುದಿಲ್ಲ. ಅವರಿಗೆ ಹತ್ತಿರವಿರುವ ಸ್ಥಳ ಆಯ್ಕೆ ಮಾಡಿಕೊಳ್ಳಬಹುದು. ಶಿಕ್ಷಕ ಮಿತ್ರ ಆಯಪ್ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಲಾಗುತ್ತದೆ. ಯಾವ ಶಿಕ್ಷಕರಿಗೂ ವರ್ಗಾವಣೆಯಿಂದ ಕಷ್ಟವಾಗಬಾರದು ಅವರು ಕಷ್ಟಪಟ್ಟು ಹೋದರೆ ಪಾಠ ಮಾಡಲು ಆಗುವುದಿಲ್ಲ. ಹೀಗಾಗಿ, ಇಷ್ಟಪಟ್ಟು ಹೋಗುವುದಕ್ಕೆ ಸಹಕಾರವಾಗುವಂತೆ ಶಿಕ್ಷಕ ಸ್ನೇಹಿ ವರ್ಗಾವಣೆ ಮಾಡಲು ಚಿಂತಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಬಾರಿ ವರ್ಗಾವಣಾ ಪ್ರಕ್ರಿಯೆಯೂ ಅತ್ಯಂತ ಪಾರದರ್ಶಕವಾಗಿರಲಿದೆ. ಶಿಕ್ಷಕ ಮಿತ್ರ ಆಪ್ ಮೂಲಕ ಶಿಕ್ಷಕರು ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು. ಸ್ಥಳ ಆಯ್ಕೆಯನ್ನೂ ಮಾಡಿಕೊಳ್ಳಬಹುದು. ಹಾಗಾಗಿ ಇಂತಹುದೊಂದು ಶಿಕ್ಷಕರ ಪರವಾದ ಸಂಪೂರ್ಣ ಪಾರದರ್ಶಕವಾದ ವ್ಯವಸ್ಥೆಯನ್ನು ಪ್ರತಿಯೊಬ್ಬರೂ ಸ್ವಾಗತಿಸಿ, ಬಳಸಿ ಪ್ರಯೋಜನ ಪಡೆಯಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದರು.