ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಬಿಎಸ್ವೈಗೆ ಮತ್ತೆ ಸಂಕಷ್ಟ | ಜನತಾ ನ್ಯೂಸ್
ಬೆಂಗಳೂರು : ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.
ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸರಿಯಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ.
ನಗರದ ದೇವರಬೀಸನಹಳ್ಳಿಯಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು 10 ಸಾವಿರ ಪುಟಗಳ ಬಿ ರಿಪೋರ್ಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀಧರ್ ಗೋಪಾಲಕೃಷ್ಣ ಭಟ್ ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿಗೆ ನ್ಯಾಯಾಲಯ ಸೂಚನೆ ನೀಡಿದ್ದಾರೆ. ಜತೆಗೆ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿ ಆಗಿದ್ದಾಗ ಆಗಿದ್ದಾಗ 4.30 ಎಕರೆ ಡಿನೋಟಿಫೈ ಮಾಡಲಾಗಿತ್ತು. 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. 2015ರಲ್ಲಿ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಜನವರಿ 2021ರಲ್ಲಿ ಆರೋಪದಲ್ಲಿ ಹುರುಳಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ ಬಿ ರಿಪೋರ್ಟ್ನ್ನು ತಿರಸ್ಕರಿಸಿದ ಕೋರ್ಟ್ ಪ್ರಕರಣದ ತನಿಖೆಗೆ ಆದೇಶ ನೀಡಿದೆ.
ಯಡಿಯೂರಪ್ಪ ಅವರು 2019ರ ಜ.25ರಂದು ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿ, ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ಹೀಗಾಗಿ, ವಿಶೇಷ ನ್ಯಾಯಾಯಲ ದೂರನ್ನು ವಿಚಾರಣೆ ಅಂಗೀಕರಿಸಿರುವುದು ಕಾನೂನು ಬಾಹಿರ ಕ್ರಮ. ಹೀಗಾಗಿ, ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು. ಆದರೆ, ಹೈಕೋರ್ಟ್ ಅರ್ಜಿ ವಜಾ ಮಾಡಿತ್ತಲ್ಲದೆ, ಸೂಕ್ತ ತನಿಖೆ ನಡೆಸದ ಲೊಕಾಯುಕ್ತ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು.