ನಾವು ಮೇಕೆದಾಟು ಯೋಜನೆಯನ್ನು ಆರಂಭಿಸುತ್ತೇವೆ, ತಮಿಳುನಾಡು ತೀರ್ಮಾನದ ಬಗ್ಗೆ ಮಾತು ಬೇಡ - ಸಿಎಂ ಬಿಎಸ್ವೈ | ಜನತಾ ನ್ಯೂಸ್
ಬೆಂಗಳೂರು : ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತೇವೆ. ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಯಾವ ತೀರ್ಮಾನ ತೆಗೆದುಕೊಂಡಿದೆ ಎನ್ನುವ ಬಗ್ಗೆ ಮಾತು ಬೇಡ, ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಹೇಳಿದ್ದಾರೆ.
ಇಂದು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಜಲಜೀವನ್ ಮಿಷನ್ ಕುರಿತು ವಿವಿಧ ವಿಷಯಗಳನ್ನು ಚರ್ಚಿಸಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ , ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಕೇಂದ್ರ ಸಚಿವರೊಂದಿಗೆ ರಾಜ್ಯದ ನೀರಾವರಿ ಯೊಜನೆಗಳ ಬಗ್ಗೆ ಚರ್ಚೆ, ಮಾಡಿದ್ದೇವೆ. ಕೃಷ್ಣಾ ಯೋಜನೆಗೆ ನೋಟಿಫಿಕೇಶನ್ ಹೊರಡಿಸುವುದು, ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವುದು. ಕಳಸಾ ಬಂಡೂರಿ ಯೋಜನೆಗೆ ಕೇಂದ್ರದ ಕ್ಲಿಯರನ್ಸ್ ನೀಡುವುದು, ಎತ್ತಿನ ಹೊಳೆ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಆದಷ್ಟು ಬೇಗ ಕೇಂದ್ರದ ದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ, ಎಂದರು.
ಗಜೇಂದ್ರ ಸಿಂಗ್ ಶೇಖಾವತ್ ಮಾತನಾಡಿ, ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಮೇಕೆದಾಟು ಸೇರಿದಂತೆ ಎಲ್ಲ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಕೇಂದ್ರ ಮಟ್ಟದಲ್ಲಿ ಸಭೆ ಕರೆಯಲಾಗುವುದು, ಎಂದು ಹೇಳಿದರು.
ಬಹಳ ಮಹತ್ವದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲ ಮನೆಗಳಿಗೂ ನೀರಿನ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಇನ್ನೂ 25 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸಲು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ವೈ ಹೇಳಿದರು.